Tuesday, July 14, 2009

ಕಳೆದುಕೊಳ್ಳುವ ಬಗೆಗೊಂದು ಸ್ವಗತ...

ಎರಡು ವರ್ಷದ ಹಿಂದಿನ ಕಥೆ. ಅವತ್ತೊಂದು ದಿನ ಬನ್ನೇರುಘಟ್ಟದಲ್ಲಿರುವ ಅತ್ತಿಗೆಯ ಮನೆಯಿಂದ ವಾಪಸ್ ಹೊರಟವಳು ಗೆಳತಿಯ ಮನೆಗೆ ಹೋಗುವ ಬಸ್ಸಿನಲ್ಲಿ ಕೂತಿದ್ದೆ. ಅರ್ಧ ದಾರಿಯಲ್ಲಿ ನನ್ನ ಪಕ್ಕದಲ್ಲಿ ನಿಂತಿದ್ದ ಹೆಂಗಳೆಯೊಬ್ಬಳು ತನ್ನ ಮಗುವನ್ನು ನನ್ನ ಮಡಿಲಲ್ಲೇರಿಸಿದಳು. ಮಗುವನ್ನು ನೀಟಾಗಿ ನನ್ನ ಮಡಿಲಲ್ಲಿ ಅವಳು ಕೂರಿಸುವಾಗ ನಾನು ಪಿಳಿಪಿಳಿ ಕಣ್ಣುಬಿಡುತ್ತಿದ್ದ ಮಗುವಿನ ಮುಖ ನೋಡ್ತಾ ಇದ್ದೆ. ಅವಳು ಕೂರಿಸಿಯಾದ ಮೇಲೆ ಮಗುವನ್ನು ನಾನು ಹಿಡಿದುಕೊಂಡು ಕೂತೆ.

ಸ್ವಲ್ಪ ದೂರ ಹೋದನಂತರ ಆಕೆ ಮಗುವನ್ನು ನನ್ನ ಮಡಿಲಿನಿಂದ ತೆಗೆದುಕೊಂಡು ಬಸ್ ಇಳಿದಳು. ಅದ್ಯಾಕೋ ಅವಳು ಸ್ವಲ್ಪ ಜಾಸ್ತಿಯೇ ನನ್ನ ಮಡಿಲು ತಡಕಿದಳೇನೋ ಅಂತನಿಸಿದರೂ ಅದೇಕೋ ಆಕಡೆ ಗಮನ ಕೊಡಲಿಲ್ಲ.

ನಂತರ ಜಯನಗರದಲ್ಲಿ ಬಸ್ಸಿಂದ ಇಳಿಯುವಾಗ ಪರ್ಸ್ ಝಿಪ್ ತೆರೆದಿದ್ದು ಗಮನಕ್ಕೆ ಬಂತು. ಆಗಲೂ ನನಗೇನೂ ಅನಿಸಲಿಲ್ಲ. ಝಿಪ್ ಹಾಕಿಕೊಂಡು ಆಟೋ ಹಿಡಿದು, ವಿದ್ಯಾಪೀಠ ಸರ್ಕಲ್ಲಿಗೆ ಹೋದೆ. ಅಲ್ಲಿ ಫ್ರೆಂಡ್ ಮನೆಯ ಹತ್ತಿರ ಇಳಿದು ದುಡ್ಡಿಗೆಂದು ಪರ್ಸ್ ತಡಕಾಡಿದರೆ- ಬ್ಯಾಂಕಿಗೆ ಹಾಕಬೇಕೆಂದು ಬ್ಯಾಗಲ್ಲಿಟ್ಟುಕೊಂಡಿದ್ದ ಉಳಿತಾಯದ 9,500 ರೂಪಾಯಿ ಇದ್ದ ಕಟ್ಟು ಕಾಣೆ... ಕಳ್ಳಿ ಮೊಬೈಲ್ ಉಳಿಸಿಹೋಗಿದ್ದಳು. ಗೆಳತಿಯ ಮನೆ ಅಲ್ಲೇ ಇದ್ದ ಕಾರಣ ಆಟೋ ಚಾರ್ಜ್ ಕೊಟ್ಟು ಬಚಾವಾದೆ. (ಪೊಲೀಸ್ ಹತ್ತಿರ ದೂರು ಕೊಡಲಿಕ್ಕೆ ಹೋಗಿದ್ದೆ, ಆಕಥೆ ಇನ್ನೊಮ್ಮೆ ಹೇಳ್ತೀನಿ)

--------------------------------

ವರ್ಷದ ಹಿಂದಿನ ಕಥೆ. ಒಂದು ಮಧ್ಯಾಹ್ನ. ಐಸಿಐಸಿಐ ಕ್ರೆಡಿಟ್ ಕಾರ್ಡ್ ವಿಭಾಗದಿಂದ ಕರೆ ಬಂತು. ಏನೆಂದು ಕೇಳಿದರೆ, "ನೀವು ನಿನ್ನೆ ಮಾಡಿದ ಖರೀದಿಯನ್ನು ಇಎಂಐ ಮೂಲಕ ಕಟ್ಟಬಹುದು, ತಿಳಿಸಲಿಕ್ಕೆ ಕರೆ ಮಾಡಿರುವೆವು" ಎಂದರು. ಆ 'ನಿನ್ನೆ' ನಾನೆಲ್ಲೂ ಕ್ರೆಡಿಟ್ ಕಾರ್ಡ್ ಉಜ್ಜಿರಲಿಲ್ಲವಾದ್ದರಿಂದ ಇವರು ಯಾವುದರ ಬಗ್ಗೆ ಹೇಳುತ್ತಿದ್ದಾರೆಂದು ತಿಳಿಯಲಿಲ್ಲ. ಕೇಳಿದರೆ ಹೇಳಿದರು, ನಾನು 37,000+ ಮೌಲ್ಯದ ವಿಮಾನದ ಟಿಕೆಟ್-ಗಳು ಕ್ರೆಡಿಟ್ ಕಾರ್ಡ್ ಮೂಲಕ ಹಿಂದಿನ ದಿನ ಖರೀದಿಸಿದ್ದೆನಂತೆ.

ಕೂಡಲೇ ಎಚ್ಚತ್ತ ನಾನು, ನಾನು ಖರೀದಿಸಿಯೇ ಇಲ್ಲವೆಂದು ಹೇಳಿದೆ. ಸ್ವಲ್ಪ ವಿಚಾರಣೆ ನಡೆಸಿ ನಾನು ಆಸಮಯದಲ್ಲಿ ಬೇರೇನೋ ಮಾಡುತ್ತಿದ್ದೆ, ಮತ್ತು ಕ್ರೆಡಿಟ್ ಕಾರ್ಡ್ ನನ್ನ ಹತ್ತಿರವೇ ಇತ್ತು, ಬೇರೆಲ್ಲೂ ಹೋಗಿರಲಿಲ್ಲ ಎಂಬ ಉತ್ತರ ಪಡೆದ ನಂತರ, ಆಕೆ ನನಗೆ ಕೂಡಲೇ ಐಸಿಐಸಿಐ ಕ್ರೆಡಿಟ್ ಕಾರ್ಡ್ ಡಿವಿಜನ್ನಿಗೆ ಟ್ರಾನ್ಸಾಕ್ಷನ್ ಡಿಸ್ಪ್ಯೂಟ್ ಹಾಕಲು ಹೇಳಿದಳು. ಕೊನೆಗೆ ಅದೇನೇನು ಮಾಡಬೇಕೋ ಎಲ್ಲಾ ಮಾಡಿ, ಬ್ಯಾಂಕಿಗೆ ನಾನು ಮಾಡಿದ ಖರೀದಿಯಲ್ಲವೆಂಬುದನ್ನು ತಿಳಿಯಪಡಿಸಿದೆ. ಅವರು ಒಪ್ಪಿಕೊಂಡು ನನ್ನ ಬಿಲ್-ನಿಂದ ತಾತ್ಕಾಲಿಕವಾಗಿ ಅದನ್ನು ತೆಗೆಯುತ್ತೇವೆಂದರು. ಒಂದು ವೇಳೆ ತಮ್ಮ ತನಿಖೆಯಲ್ಲಿ ನಾನೇ ಖರೀದಿಸಿದ್ದೆಂದು ಪ್ರೂವ್ ಆದರೆ ಮಾತ್ರ ಅದನ್ನು ನಾನೇ ಕಟ್ಟಬೇಕಾಗುತ್ತದೆಂದು ಎಚ್ಚರಿಸಿದರು. ನಾನು ಖರೀದಿಯೇ ಮಾಡಿಲ್ಲವಾದ ಕಾರಣ ಅವರು ಸಾಧಿಸುವ ಪ್ರಶ್ನೆಯೇ ಬರುವುದಿಲ್ಲವೆಂದು ನಾನು ಭರವಸೆ ನೀಡಿದೆ.

ಕೆಲ ದಿನ ಬಿಟ್ಟು ಕ್ರೆಡಿಟ್ ಕಾರ್ಡ್ ಬಿಲ್ ಬಂತು. ಅದರಲ್ಲಿ ನಾನು ಕಟ್ಟಬೇಕಿರುವ ದುಡ್ಡು ಸೊನ್ನೆ ರೂಪಾಯಿಯಿತ್ತು, ನನಗೆ ದುಡ್ಡು ಬರಬೇಕಿತ್ತು. ಏನೆಂದು ಚೆಕ್ ಮಾಡಿದರೆ, ವಿಮಾನ ಟಿಕೆಟ್ ಖರೀದಿಸಿದಾಗ ಅದರಲ್ಲಿ 5% cash-back offer ಇದ್ದುದರಿಂದ 1800 ರೂಪಾಯಿಯಷ್ಟು ನನ್ನ ಅಕೌಂಟಿಗೆ ವಾಪಸ್ ಬಂದು, ನಾ ಕಟ್ಟಬೇಕಿರುವ 1700+ರಷ್ಟು ದುಡ್ಡು ಮಾಫಿಯಾಗಿತ್ತು..!

--------------------------------

ಇವತ್ತು ಶಿವಾಜಿನಗರದಲ್ಲಿ ಬಸ್ಸಿಗೆ ಕಾದುನಿಂತಿದ್ದೆ. ಬಸ್ ಬಂತು, ಸಹಜವಾಗಿಯೇ ರಶ್ ಇತ್ತು. ನೂಕುನುಗ್ಗಲಿನಲ್ಲಿ ಬಸ್ಸಿಗೆ ಹತ್ತುವಾಗ ನನ್ನ ಹಿಂದಿದ್ದವಳ ಕೈ ನನ್ನ ಹ್ಯಾಂಡ್ ಬ್ಯಾಗಿನ ಬದಿಯಲ್ಲಿ ಝಿಪ್ ತೆರೆಯಲು ಯತ್ನಿಸುತ್ತಿದ್ದುದು ಅನುಭವಕ್ಕೆ ಬಂತು. ಮೆಲ್ಲಗೆ ನೋಡಿ ವಿಷಯ ಹೌದೆಂದು ಕನ್-ಫರ್ಮ್ ಮಾಡಿಕೊಂಡೆ. ಬ್ಯಾಗ್ ಹಾಕಿಕೊಂಡಿದ್ದ ಕೈಯಿಂದ ಆಕೆಯ ಕೈಹಿಡಿದೆ. ಬಿಡಿಸಿಕೊಳ್ಳಲು ಯತ್ನಿಸಿದಳು. ನಾ ಬಿಡಲಿಲ್ಲ. ಹಾಗೇ ಹಿಂತಿರುಗಿ ನೋಡಿ "ಏನ್ರೀ ಮಾಡ್ತಿದೀರಾ, ಮರ್ಯಾದಸ್ತರ ಥರ ಕಾಣ್ತೀರಾ, ಮಾಡೋದು ಇಂಥಾ ಕಚಡಾ ಕೆಲಸಾನಾ" ಅಂತ ರೋಪ್ ಹಾಕಿದೆ.

ಆಕೆ ತಕ್ಷಣ ಕೈಬಿಡಿಸಿಕೊಂಡಳು, "ನಾನೇನು ಮಾಡಿದೀನಿ, ನನ್ನ ಪಾಡಿಗೆ ಬಸ್ಸಿಗೆ ಹತ್ತುತಾ ಇದ್ದೀನಿ" ಅಂದಳು. ಬಸ್ಸಿಗೆ ಹತ್ತೋರು ನನ್ "ಬ್ಯಾಗಿಗೆ ಯಾಕ್ ಕೈಹಾಕ್ತಿದೀರಾ" ಅಂದೆ. "ಹಿಡ್ಕೊಳ್ಳೋಕೆ ಏನೂ ಸಿಕ್ಕಿಲ್ಲ, ಹಾಗಾಗಿ ಬ್ಯಾಗ್ ಹಿಡಿದೆ" ಎಂದಳು. ಉಳಿದವರು ನಮ್ಮ ಜಗಳ ನೋಡುತ್ತಿದ್ದರು. ಆದರೆ ಆಕೆ ಕದಿಯಲು ಹೊರಟವಳೆಂದು ಸಾಧಿಸಲು ನನ್ನಲ್ಲೇನೂ ಇರಲಿಲ್ಲವಾದ ಕಾರಣ ಕೊನೆಗೆ ನಾನೇ ಸುಮ್ಮನಾದೆ. ಆಕೆ ತನ್ನನ್ನು ಕಳ್ಳಿಯೆಂದ ನನಗೆ ಹಿಡಿಶಾಪ ಹಾಕುತ್ತಿದ್ದಳು.

---------------------------------

ಕಳ್ಳರು ಬೇರೆ ಬೇರೆ ರೀತಿಯಲ್ಲಿರುತ್ತಾರೆ. ಕೆಲವರಿಗೆ ದೋಚುವುದು ಬದುಕಲಿಕ್ಕಿರುವ ಅನಿವಾರ್ಯತೆ. ಇನ್ನು ಕೆಲವರಿಗೆ ಕದಿಯುವುದು ಚಟ. ಕೆಲವರು ದೋಚಿದ್ದು ಗೊತ್ತೇ ಆಗುವುದಿಲ್ಲ - ತುಂಬಾ ಸೊಫಿಸ್ಟಿಕೇಟೆಡ್ ಆಗಿ ಕೃತ್ಯವನ್ನು ಗೈದಿರುತ್ತಾರೆ, ಮತ್ತು ಅದಕ್ಕೇನಾದರೂ ಹೆಸರು ಕೂಡ ಇಟ್ಟಿರುತ್ತಾರೆ. ಕದ್ದಿದ್ದನ್ನು ಅಥವಾ ದೋಚಿದ್ದನ್ನು ಒಪ್ಪಿಕೊಳ್ಳುವ ಕಳ್ಳರು ತುಂಬಾ ಕಡಿಮೆ. ಕದಿಸಿಕೊಳ್ಳುವುದು, ಕಳೆದುಕೊಳ್ಳುವುದು ನನಗೆ ಅಭ್ಯಾಸವಾಗಿಹೋಗಿದೆ.

ಹಾಗೆಂದು ಬದುಕಲ್ಲಿ ಕಳೆದುಕೊಳ್ಳಲು ಬೇಜಾರಿರಲಿಲ್ಲ ನನಗೆ... ಬದುಕೆಂದರೆ ಕಳೆಯುವ-ಕೂಡುವ ಲೆಕ್ಕಾಚಾರ ಎಂಬ ಮಾತು ಒಪ್ಪಿಕೊಳ್ಳಲು ಹಿಂದೆ-ಮುಂದೆ ನೋಡಿದವಳು ನಾನು.

ಆದರೆ, ಇತ್ತೀಚೆಗೆ ಮಾತ್ರ, ನಿಜ, ಬದುಕೆಂದರೆ ಕೂಡುವುದು - ಕಳೆಯುವುದು ಬಿಟ್ರೆ ಇನ್ನೇನೂ ಇಲ್ಲ ಅಂತ ಅನಿಸ್ತಿದೆ. ಬರೀ ಕಳೆದುಕೊಳ್ಳುವುದರಿಂದ ಏನು ಸಾಧಿಸ್ತೀನಿ, ಬದುಕಿಡೀ ಇದೇ ಆದರೆ, ಪಡೆದುಕೊಳ್ಳುವುದು ಯಾವಾಗ ಅಂತ ಅನಿಸ್ತಿದೆ. ಏನು ಪಡೆದೆವೋ ಅದು ಮಾತ್ರ ಕೊನೆಗೆ ಬದುಕ ಬುತ್ತಿಯಲ್ಲುಳಿಯುತ್ತದೆ, ನಮ್ಮನ್ನು ಅಳೆಯುವವರೂ ಅದರ ಮೂಲಕವೇ ಅಳೆಯುತ್ತಾರೆ... ಕಳೆದುಕೊಂಡಿದ್ದಕ್ಕೆ ಕಣ್ಣೀರಿಡುವುದು ಉಪಯೋಗವಿಲ್ಲ, ಪಡೆಯಲಿಕ್ಕೆ ಪ್ಲಾನ್ ಮಾಡಬೇಕು ಅಂತನಿಸುತ್ತಿದೆ.

ಇದೆಲ್ಲದಕ್ಕಿಂತ ಹೆಚ್ಚಾಗಿ, ಮನುಷ್ಯ ಮೂಲತಹ ತುಂಬಾ ಸ್ವಾರ್ಥಿ, ಸ್ವಾರ್ಥ ಬಿಟ್ಟು ಬದುಕುವುದು ಅಪರೂಪದ ಕೆಲಸ, ಅದು ಮಾಡಿ ನಾನ್ಯಾಕೆ ಬುದ್ಧನ ಶ್ರೇಣಿಗೇರಬೇಕು, ಅದರಿಂದೇನಾಗುತ್ತದೆ - ಅಂತಲೂ ಅನಿಸ್ತಿದೆ. ನಮ್ಮ ಆತ್ಮದ ಒಳಗಿರುವ ಅಹಂ ಯಾವಾಗಲೂ ಲೆಕ್ಕಾಚಾರ ಹಾಕುತ್ತಿರುತ್ತದೆ - ಅದಕ್ಕೆ ಸ್ವಾರ್ಥದಿಂದಲೇ ತೃಪ್ತಿ - ಅಲ್ವಾ...?

Monday, May 18, 2009

ಇದಪ್ಪಾ ಗೂಳಿಕುಣಿತ...!

ಈಬಾರಿ ಕೂಡ ಚೌಚೌ ಗವರ್ಮೆಂಟೇ ಬರುತ್ತೆ ಸೆಂಟರಲ್ಲಿ ಅಂತ ಎಲ್ಲಾ ಎಕ್ಸಿಟ್ ಪೋಲುಗಳೂ ಹೇಳುತ್ತಾ ಇದ್ದ ಹಾಗೆ, ಮಾರ್ಕೆಟ್ ಸ್ವಲ್ಪ ಏರಿದ ಸಮಯ ನೋಡಿ ನಾನು ಕೈಯಲ್ಲಿದ್ದ ಲಾಭದ ಸ್ಕ್ರಿಪ್ ಎಲ್ಲಾ ಮಾರಿಬಿಟ್ಟೆ. ನಾನು ಮಾರಿದ್ದು ಮಾತ್ರವಲ್ಲ, ನನ್ನಜತೆ ಆಗಾಗ ಡಿಸ್ಕಸ್ ಮಾಡುವ ಗೌಡ್ರಿಗೆ ಕೂಡ ನಾನು ಮಾಡಿದ್ದನ್ನು ಹೇಳಿದೆ, ಅವರು ಕೂಡ ಆಗಲೇ ಕೈಯಲ್ಲಿದ್ದುದೆಲ್ಲ ಮಾರಿ ದುಡ್ಡು ರೆಡಿ ಇಟ್ಟುಕೊಂಡಿದ್ದರು. ಚೌಚೌ ಗವರ್ಮೆಂಟು ಬಂದ ಕೂಡಲೇ ಮಾರ್ಕೆಟ್ಟು ಹೇಗೂ ಬೀಳುತ್ತದಲ್ಲ, ಆಗ ಕಡಿಮೆಗೆ ಸಿಗುವ ಒಳ್ಳೆ ಕಂಪೆನಿ ಶೇರುಗಳನ್ನು ಕೊಳ್ಳಬೇಕೆಂಬುದು ನಮ್ಮ ಪ್ಲಾನಾಗಿತ್ತು.

ಆದರೇನು ಮಾಡಲಿ, 16ನೇ ತಾರೀಖು ಶನಿವಾರ ಫಲಿತಾಂಶ ಬರುತ್ತಾ ಬರುತ್ತಾ ಕಾಂಗ್ರೆಸ್ ಸೀಟುಗಳು 180 ದಾಟುತ್ತಿದ್ದ ಹಾಗೆ ನನಗೆ ಚಳಿ ಶುರುವಾಯಿತು... ಮಾರ್ಕೆಟ್ ಮೇಲೇರಲಿರುವುದರ ಬಗ್ಗೆ ಖುಷಿಯ ಬದಲು ದು:ಖವಾಯಿತು. ಛೇ, ಅನ್ಯಾಯವಾಗಿ ರಿಲಯನ್ಸ್ ಮತ್ತು ಐಸಿಐಸಿಐ ತುಂಬಾ ಕಡಿಮೆ ಲಾಭಕ್ಕೆ ಮಾರಿಬಿಟ್ಟೆನಲ್ಲಾ ಅಂತ ಪಶ್ಚಾತ್ತಾಪವಾಗತೊಡಗಿತು... ಬುದ್ಧ ಹೇಳಿದ ಆಸೆಯೇ ದು:ಖಕ್ಕೆ ಮೂಲ ಎಂಬ ಮಾತು ನಂಗೆ ಆದಿನ ತನ್ನ ವಿವಿಧ ಬಣ್ಣಗಳಲ್ಲಿ ಚೆನ್ನಾಗಿ ಅರ್ಥವಾಗತೊಡಗಿತು. ಒಂದು ಕಡೆ ಸ್ಥಿರ ಸರಕಾರ ಬರುವ ಸೂಚನೆಗೆ ಖುಷಿಯಾದರೆ, ಇನ್ನೊಂದು ಕಡೆ ಛೇ, ಲೆಕ್ಕಾಚಾರ ತಪ್ಪಿತಲ್ಲಾ ಅಂತ ವಿಪರೀತ ದು:ಖ... ಮನಸ್ಸಿನಲ್ಲೇ ಶೋಕಾಚರಣೆ ಮಾಡಿದೆ. ಪಾಪ, ಗೌಡರದೂ ಅದೇ ಪರಿಸ್ಥಿತಿಯಾಗಿತ್ತೇನೋ, ಸಮಾನದು:ಖಿಗಳಾಗಿದ್ದರೂ ನಾವಿಬ್ಬರೂ ಆದಿನ ಮಾತಾಡಿಕೊಳ್ಳಲಿಲ್ಲ.

ಹೂಂ, ಇರಲಿ, ಹೇಗೂ ಸೋಮವಾರ ಮಾರ್ಕೆಟ್ ಮೇಲೇರುವುದೇ ಆದರೆ, ಇರುವ ಚೂರುಪಾರನ್ನು ಬೇಗನೇ ಮಾರಿ ಹೊಸದು ತೆಗೆದುಕೊಂಡುಬಿಡುವುದು, ಮತ್ತೆ ಹೊಸ ಸರಕಾರದ ಬಜೆಟ್ ಬಂದಾಗ ಹೇಗೂ ಮತ್ತೊಂದು ಏರಿಕೆ ಇದ್ದೇ ಇರುತ್ತದೆ, ಆಗ ಮತ್ತೆ ಮಾರಿದರಾಯಿತು ಅಂತೆಲ್ಲ ಲೆಕ್ಕಹಾಕಿ ಆದಿತ್ಯವಾರವನ್ನು ಕಷ್ಟದಲ್ಲಿ ಕಳೆದಿದ್ದಾಯಿತು. ಎಲ್ಲಾ ಎಕ್ಸ್-ಪರ್ಟುಗಳೂ 500ರಿಂದ 1000 ಪಾಯಿಂಟು ಮೇಲೆ ಹೋಗಬಹುದು ಸೆನ್ಸೆಕ್ಸು ಅಂತಿದ್ರು. ಶೇಕಡಾ ಹತ್ತರಷ್ಟು ಲಾಭಕ್ಕೇನೂ ಮೋಸವಿಲ್ಲ ಅಂತ ಅಂದುಕೊಂಡು, ಸೋಮವಾರದ 9.50ರ ಶುಭಗಳಿಗೆ ಬರಲಿಕ್ಕೇ ಕಾದುಕೂತಿದ್ದೆ.


ಬಂದೇ ಬಂತು ಶುಭಸೋಮವಾರ... The Golden Monday! 9.00 ಆಗುತ್ತಿದ್ದಂತೇ CNBCTV18 ಹಾಕಿ ಉದಯನ್ ಮುಖರ್ಜಿ ಮತ್ತು ಮಿತಾಲಿ ಶೋ ನೋಡ್ತಾ ಕೂತಿದ್ದೆ. ಉದಯನ್ ಮತ್ತು ಮಿತಾಲಿ ಮಾರ್ಕೆಟ್ ಬಿದ್ದರೆ ಮುಖ ಜೋತುಹಾಕುವ Anchorಗಳು. ನೋಡುಗರ ಭಾವನೆಗಳು ಅವರಲ್ಲೂ reflect ಆಗುತ್ತಿರುತ್ತವೆ. ಅವರು ಮಾತಾಡುತ್ತಿದ್ದಂತೇ, ಮಾರುಕಟ್ಟೆ 10% ಮೇಲೆ ಹೋದರೆ 1 ಗಂಟೆ ಟ್ರೇಡಿಂಗ್ ಇರುವುದಿಲ್ಲ, 15% ಮೇಲೇರಿದರೆ 2 ಗಂಟೆ ಬಂದ್ ಇತ್ಯಾದಿ ಮಾಹಿತಿಗಳು ಬರ್ತಾ ಇತ್ತು.

ಆಯ್ತು, 9.50 ಆಗಿಯೇ ಹೋಯ್ತು... ಅಷ್ಟೆ. ಏನಾಗುತ್ತಿದೆ ಎಂದು ತಿಳಿಯುವುದರೊಳಗಾಗಿ ಸೆನ್ಸೆಕ್ಸ್ 1300 ಅಂಕ ಮೇಲೇರಿತು, ಕೂಡಲೇ ಟ್ರೇಡಿಂಗ್ ಬಂದ್! ಇಷ್ಟಾಗಲಿಕ್ಕೆ ಮಾರ್ಕೆಟ್ ಓಪನ್ ಆಗಿ 20 ಸೆಕೆಂಡ್ ಕೂಡ ತೆಗೆದುಕೊಳ್ಳಲಿಲ್ಲ.

ನಾನು ಇಂಗು ತಿಂದ ಮಂಗನಂತೆ ಏನಾಗುತ್ತಿದೆಯೆಂದೇ ಅರ್ಥವಾಗದೆ ಉದಯನ್ ಮತ್ತು ಮಿತಾಲಿ ಹೇಳುವುದನ್ನೇ ಕೇಳುತ್ತ ಕೂತೆ. ಒಂದು ಗಂಟೆಯ ನಂತರ ಮತ್ತೆ ಮಾರುಕಟ್ಟೆ ತೆರೆಯಲಿದೆ ಎಂದು ಒಂದು ಸಾರಿ ಹೇಳಿದರೆ ಮತ್ತೆ ಎರಡು ಗಂಟೆಯ ನಂತರ ತೆರೆಯಲಿದೆ ಎಂದರು. ಇದಕ್ಕೆ ಕಾದು ಕೂತರೆ ಅಷ್ಟೇ ಗತಿ ಮತ್ತೆ ಅಂತ ನನಗೆ ನಾನೇ ಬುದ್ಧಿ ಹೇಳಿಕೊಂಡು ಆಫೀಸಿಗೆ ಹೊರಟೆ.

ಆಫೀಸಲ್ಲಿದ್ದರೂ, ಕೆಲಸ ಶುರುಮಾಡಿಕೊಂಡರೂ ಮಾರುಕಟ್ಟೆ ಏನಾಗುತ್ತದೋ ಎಂಬ ಕಪಿಕುತೂಹಲ ಸುಮ್ಮನೆ ಕೂರಲು ಬಿಡಲಿಲ್ಲ. ಸಮಾನಮನಸ್ಕರೆಲ್ಲ ಜತೆ ಸೇರಿ 11.45 ಆಗುತ್ತಿದ್ದಂತೆಯೇ ಐಬಿಎನ್ ಹಾಕಿ ಕೂತೆವು. 11.50 ಆಗುತ್ತಿದ್ದಂತೇ ಅಲ್ಲಿ CNBCTV18 ಪಂಚ್ ಆಯಿತು. ಈಗಲೂ ಅಷ್ಟೇ. ಮಾರುಕಟ್ಟೆ ಓಪನ್ ಆದಕೂಡಲೇ 700ರಷ್ಟು ಅಂಕಗಳು ಮೇಲೇರಿತು... And trading halted for the day!


Historical. Fantastic. Amazing. Wonderful. Unbelievable. Unpredictable. ಇನ್ನೇನು ಹೇಳಬಹುದೋ ಗೊತ್ತಿಲ್ಲ. ನಿಫ್ಟಿಯನ್ನು 650 ಅಂಕಗಳಿಂದ, ಸೆನ್ಸೆಕ್ಸನ್ನು 2110 ಅಂಕಗಳಿಂದ ಏರಿಸಿ, ಎಲ್ಲಾ ಮಿತಿಗಳನ್ನ ದಾಟಿ ನರ್ತಿಸಿತ್ತು ಗೂಳಿ! ಕರಡಿಗಳಿಗೆಲ್ಲ ಬೇಸರವಾಗಬೇಕಾದದ್ದೇ. ನಾನು 520ಕ್ಕೆ ಮಾರಿದ್ದ ಐಸಿಐಸಿಐ 745 ಮುಟ್ಟಿತ್ತು. ಇಷ್ಟರಲ್ಲಿ ನಾನು ಬುದ್ಧನ ಮಾತನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ನಂಗೆ ಬೇಸರವಾಗಲಿಲ್ಲ, ಬದಲಿಗೆ ಸಖತ್ ಖುಷಿಯಾಯಿತು.

Anchor ಮಿತಾಲಿ ನಗುನಗುತ್ತಾ ಏನೇನೋ ಹೇಳಿದಳು, ಒಂದು ಬಾರಿ ತನ್ನ anchoring seatನಿಂದ ಎದ್ದು ಮೈಮುರಿದಳು, ಅವಳು ಅಷ್ಟು ಖುಷಿಯಾಗಿದ್ದು ನಾ ಎಂದೂ ನೋಡಿರಲಿಲ್ಲ. ಇನ್ನು ನಂಗೆ ಇವತ್ತಿಗೆ anchoring ಮಾಡುವ ಕೆಲಸವಿಲ್ಲ, ಇವತ್ತೆಲ್ಲಾ ಆರಾಮ, ಇನ್ನು ಟ್ರೇಡಿಂಗ್ ಇಲ್ಲ, ಇನ್ನು ಕರಡಿ ಕುಣಿತವಿಲ್ಲ, ಮಾರ್ಕೆಟ್ ಏರುತ್ತಿದೆ, ನಾನಿನ್ನು ಮುಖ ಬಾಡಿಸಲಿಕ್ಕಿಲ್ಲ ಇತ್ಯಾದಿ ಅವಳು ಹೇಳಿದ ಹಾಗೆ ನನಗನಿಸಿತು. ಉದಯನ್ ಅಂತೂ ...! ತನ್ನ ಲ್ಯಾಪ್ಟಾಪ್ ಎತ್ತಿ ಅದಕ್ಕೊಂದು ಕಿಸ್ ಕೊಟ್ಟು, ಫುಲ್ ಖುಷ್ ಆಗಿ ಹಲ್ಲುಬಿಟ್ಟು... ಅವರ ಖುಷಿಯನ್ನು ವೈರಸ್ ಥರಾ ನಮ್ಮಮೇಲೆಲ್ಲ ಬಿಟ್ಟು... ಆಹಾ! ಖುಷಿಗೆ ಅವರಿಬ್ಬರು ಹಾರ್ಟ್ ಫೇಲ್ ಒಂದು ಮಾಡಿಕೊಂಡಿಲ್ಲ ನೋಡಿ.

ಸ್ಟಾಕ್ ಮಾರ್ಕೆಟ್ ಹಿಸ್ಟರಿಯಲ್ಲೇ ಇದು ಐತಿಹಾಸಿಕ ದಿನವಂತೆ. ಒಟ್ಟಿನಲ್ಲಿ ಎಲ್ಲರಿಗೂ ಖುಷಿಯೋ ಖುಷಿ. ಗೌಡ್ರೂ ನನ್ನದೇ ಪರಿಸ್ಥಿತಿಯಲ್ಲಿದ್ದರು, ಹಾಗೆ ಮುಕ್ತವಾಗಿ ನಾಕುಮಾತು ಸುಖದು:ಖ ಹಂಚಿಕೊಂಡು ಹಗುರಾದೆವು.

ಸದ್ಯದ ಆರ್ಥಿಕ ಹಿಂಜರಿತದಿಂದ ಮೇಲೇಳಲಿಕ್ಕಾಗಿ ಇಡೀ ಜಗತ್ತು ಭಾರತ ಮತ್ತು ಚೀನಾದೆಡೆಗೆ ನೋಡುತ್ತಿರುವ ಈ ಕಾಲಘಟ್ಟ... ಎಡ-ಬಲಗಳನ್ನು ಬಿಟ್ಟು ಮಧ್ಯವನ್ನು ಆಯ್ಕೆ ಮಾಡಿ ಸುಭದ್ರತೆಯ ತೀರ್ಪು ನೀಡಿದೆ ಭಾರತ. ನಾಳೆ ಮಾರುಕಟ್ಟೆ ಮತ್ತೂ ಮೇಲೇರಬಹುದೇನೋ... ಏನಾಗಬಹುದೆಂದು ಊಹಿಸುವುದು ಸದ್ಯಕ್ಕೆ ನನ್ನ ಮಿತಿಗೆ ಮೀರಿದ್ದು. ಆದರೆ ಇವತ್ತು ಮಾತ್ರ ನಾನು ಖುಷ್... :-)

Wednesday, May 13, 2009

ನೀರಿಲ್ಲ, ಮಾತಿಲ್ಲ

ಇಲ್ಲ
ಎತ್ತೆತ್ತ ನೋಡಿದರೂ ನೀರೇ ನೀರು... ಆದರೆ, ನನಗೆ ಕುಡಿಯಲಿಕ್ಕೆ ಗುಟುಕು ನೀರಿಲ್ಲ.
ಸುತ್ತಲಿರುವುದು ಬಲುದೊಡ್ಡದಾದ ಸಮುದ್ರ... ಉಪ್ಪುನೀರು, ಎಷ್ಟಿದ್ದರೇನು, ಬಾಯಾರಿಕೆ ಹಿಂಗೀತೇ?

---------

ಮಾತು
ಹೋಗಬೇಕಾದ ದಾರಿಯಿನ್ನೂ ಬಲುದೂರ ಬಾಕಿಯುಳಿದಿದೆ.  ಮಾತಾಡಿದ್ದು ಹೆಚ್ಚೇನಿಲ್ಲ, ಆದರೆ ಮನಸೆಲ್ಲ ಖಾಲಿಯಾಗಿದೆ, ಮಾತು ಮುಗಿದುಹೋಗಿದೆ. ಮೌನದಲ್ಲಿ ಮಾತಾಡುವಾತ ನೀನಲ್ಲದಿರುವಾಗ, ಇನ್ನುಳಿದ ದೂರ ಮೌನದಲ್ಲಿ ಹೇಗೆ ಕ್ರಮಿಸಲಿ?

Tuesday, May 5, 2009

ತಿಳಿವಿನತ್ತಲಿನ ಪಯಣಕ್ಕೊಂದು ವಿದಾಯ...

'ಜಾಗೃತಿ ನಿಲ್ಲುತ್ತಿದೆ...' ಹೀಗೊಂದು ಸಂದೇಶ ಇವತ್ತು ಬೆಳಬೆಳಿಗ್ಗೆ ಮೊಬೈಲಿನಲ್ಲಿ ಬಂದು ಕೂತಿದೆ. ನೋಡಿದ ಕೂಡಲೇ ಯಾಕೋ ತುಂಬಾ ಸಂಕಟ, ತಳಮಳ ಶುರುವಾಗಿದೆ.

++++++++++++

ಅಭಿವೃದ್ಧಿ ಪತ್ರಿಕೋದ್ಯಮ ಯಾವುದೇ ಮಾಧ್ಯಮದಲ್ಲಾದರೂ ಇರಲೇಬೇಕು, ಅದು ಮಾಧ್ಯಮದ ಜವಾಬ್ದಾರಿ ಅಂತಲೇ ಪತ್ರಿಕೋದ್ಯಮ ಕಲಿಯುತ್ತಿದ್ದ ದಿನಗಳಿಂದ ಇಂದಿನವರೆಗೂ ನಂಬಿರುವ ನನಗೆ, ಕಸ್ತೂರಿ ಸೇರಿದಾಗ ಸಿಕ್ಕಿದ್ದು ಜಾಗೃತಿ ಎನ್ನುವ ಹೆಸರು, ವಾರಕ್ಕೆ ಏಳು ದಿನವೂ ಬೆಳಗಿನ 10.30ಕ್ಕೆ ಹೊಂದುವ ರೀತಿಯಲ್ಲಿ ಅರ್ಧ ಗಂಟೆ ಕಾರ್ಯಕ್ರಮ ಕೊಡಬೇಕು ಎಂಬ ನಿಯಮ... ಜತೆಗೆ ಓಂಕಾರ್, ಅರುಣ್, ಅಂಬುಕೇಶ್ ಶೂಟಿಂಗ್ ಮಾಡಿದ್ದ ಒಂದಿಷ್ಟು ಸಂದರ್ಶನಗಳು ಕೂಡ.

ಜಾಗೃತಿ ಹೆಸರಿನಡಿಯಲ್ಲಿ ಏನಿರಬೇಕು, ಹೇಗಿರಬೇಕೆಂದು ಹಿರಿಯರ ಜತೆ ಚರ್ಚಿಸಿ, ಅದಕ್ಕೊಂದು ರೂಪ ಕೊಟ್ಟು, ಮೊದಲ ಎಪಿಸೋಡ್ ಸಿದ್ಧಪಡಿಸಿ, ಹಿರಿಯರಿಗೆ ತೋರಿಸಿ, ಅವರು ಸೂಚಿಸಿದ ಬದಲಾವಣೆಗಳು ಮಾಡಿಸಿ... ಅದಕ್ಕೊಂದು ಆಶಯ ಸಂಚಿಕೆ (ಕರ್ಟನ್-ರೈಸರ್) ಎಪಿಸೋಡ್ ಕೂಡ ಮಾಡಿದ್ದು, ಮಾಂಟೇಜ್ ಗ್ರಾಫಿಕ್ಸ್ ಹೀಗೇ ಬೇಕು ಅಂತ ಹಠಹಿಡಿದು ಮತ್ತೆಮತ್ತೆ ಆದಿತ್ಯ ಕೈಲಿ ಮಾಡಿಸಿ ಕೊನೆಗೆ ಅಂತಿಮಗೊಳಿಸಿದ್ದು... ಮೊದಲ ಬಾರಿಗೆ ಕಾರ್ಯಕ್ರಮ ಪ್ರಸಾರವಾದಾಗ ಫೀಡ್-ಬ್ಯಾಕ್-ಗಾಗಿ ಒದ್ದಾಡಿದ್ದು... ಚೆನ್ನಾಗಿಲ್ಲ ಅಂತ ಕೆಲವರು ಅಂದಾಗ ಕುಗ್ಗಿದ್ದು, ಮತ್ತೆ ಚೆನ್ನಾಗಿ ಮಾಡಬೇಕು ಅಂತ ಹುರುಪು ತುಂಬಿಕೊಂಡು ಹೊರಟಿದ್ದು... ನಿನ್ನೆ-ಮೊನ್ನೆಯಷ್ಟೇ ಆದಂತಿದೆ.

This is a program where Content is the Hero ಅಂತ ಅಂದುಕೊಂಡರೂ ಇತರ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಂಡಿದ್ದು ಕಡಿಮೆಯೇನಲ್ಲ... ಹಿನ್ನೆಲೆ ದನಿ ಹೀಗೇ ಬೇಕು ಅಂತ ಚೇತನಾ, ಹೇಮಲತಾ, ರೂಪಾಗೆ ಕಾಟ ಕೊಟ್ಟು ಬೋರ್ ಹೊಡಿಯೋಷ್ಟು ಸಲ ರೀಟೇಕ್ ತಗೊಂಡಿದ್ದು, ಸಪ್ನಾ ದನಿಯಲ್ಲಿರೋ ಅಭಿವ್ಯಕ್ತಿಗೆ ಮರುಳಾಗಿದ್ದು, ಎಲ್ಲಿ emotional ಆಗಿ ಅಥವಾ ಖಡಕ್ ಆಗಿ ಬೇಕೋ ಅಲ್ಲಿ ಅವಳದೇ ದನಿಗೆ ಕಾದು ಕೂತು ತಗೊಂಡಿದ್ದು... ನಂತರ ಹೋಗುತ್ತ ಹೋಗುತ್ತ ಸುಕನ್ಯಾ, ಪ್ರತೀಕ್, ವಿನುತಾ, ಕೃತ್ತಿಕಾ ಮುಂತಾದವರ ದನಿಯನ್ನೂ ಸೇರಿಸಿಕೊಂಡಿದ್ದು...

ಹಂಗೇ ಬೇಕು ಹಿಂಗೇ ಬೇಕು ಅಂತ ಕಿರಿಕಿರಿ ಮಾಡಿ, ಕ್ಯಾಮರಾಮನ್ನುಗಳಿಗೆಲ್ಲ ಏನಿದ್ರೂ ಸರಿ, ಜಾಗೃತಿ ಡ್ಯೂಟಿ ಮಾತ್ರ ಬೇಡಪ್ಪಾ ಅಂತ ಅನ್ಕೊಳೋ ಥರ ಮಾಡಿದ್ದು, ಅದರೂ ನಿರೀಕ್ಷಿತವಾದದ್ದು ಕೊಡಲಿಕ್ಕೆ ಅವರೆಲ್ಲ ಪ್ರಯತ್ನಿಸಿದ್ದು... ಕ್ಯಾಮರಾ ಹಿಡಿದು ಹೋದಾಗಲೆಲ್ಲ ಅಳಿಲು ಸಿಗುತ್ತಾ ಅಂತ ಹುಡುಕುವ ರಮೇಶ್ ಸರ್, ಕ್ಯಾಮರಾದಲ್ಲಿ ಮುಳುಗಿದ್ದಾಗ ಡಿಸ್ಟರ್ಬ್ ಮಾಡಿದರೆ ಹಿಡಿದು ಬಾರಿಸಲಿಕ್ಕೂ ಹಿಂಜರಿಯದ ಸುರೇಶ್... ಪೆರುಮಾಳ್, ರಾಜಶೇಖರ್, ತುಷಾರ್... ಬೆಳ್ಳಂಬೆಳಗಿನ ಏರುಬಿಸಿಲು ಮತ್ತು ಇಳಿಹೊತ್ತಿನ ಹಳದಿ ಬೆಳಕಿನ ಉತ್ತಮ ಶಾಟ್-ಗಳಿಗಾಗಿ ಕಾತರಿಸುತ್ತಿದ್ದ ನಾವುಗಳು...

ತಾಳ್ಮೆಯಿಂದ ಎಡಿಟಿಂಗ್ ಟೇಬಲ್ಲಿನಲ್ಲಿ ಕಾರ್ಯಕ್ರಮಕ್ಕೆ ಅಂತಿಮ ರೂಪ ಕೊಡುತ್ತಿದ್ದ ಶಿವು ಸರ್, ಬಾಲು ಸರ್... ಜಗಳಾಡುತ್ತಲೇ ಎಡಿಟಿಂಗ್ ಮಾಡಿಕೊಡುತ್ತಿದ್ದ ಕಿಶೋರ್... ಪ್ರೊಡಕ್ಷನ್-ನಲ್ಲಿ ಸಹಕಾರ ನೀಡಿದ ಗೌಡರು, ವಿಲಾಸ್, ಜಗದೀಶ್... ಎಪಿಸೋಡ್ ಪ್ರಿವ್ಯೂ ಮಾಡಿ ಕಾಲೆಳೆಯುತ್ತಲೇ ಫೀಡ್-ಬ್ಯಾಕ್ ನೀಡುತ್ತಿದ್ದ ಪ್ರಕಾಶ್ ಅಡಿಗ, ವಿಜಯರಾಘವನ್ ಸರ್... ಪಿಸಿಆರ್ ಸ್ಟಾಫ್-ನಿಂದ ಹಿಡಿದು ರಿಸೆಪ್ಶನ್, ಡ್ರೈವರ್ ವರೆಗೆ ಚಾನೆಲ್ ಒಳಗಡೆ ಕೂಡ ಇದ್ದಂತಹ ಅಸಂಖ್ಯ ಅಭಿಮಾನಿಗಳು.. ಕಾರ್ಯಕ್ರಮದ ಮೇಲೆ ಇವರಲ್ಲಿ ಪ್ರತಿಯೊಬ್ಬರೂ ಇಟ್ಟ ಅಭಿಮಾನ, ನೀಡುತ್ತಿದ್ದ ಅಮೂಲ್ಯ ಸಲಹೆಗಳು... ಎಲ್ಲಕ್ಕಿಂತ ಹೆಚ್ಚಾಗಿ ಕಾರ್ಯಕ್ರಮ ನೋಡಿ ರೇಟಿಂಗ್ ಮೂಲಕ, ಸಂದೇಶಗಳ ಮೂಲಕ ಮೆಚ್ಚಿಕೊಂಡಿದ್ದೇವೆಂದು ಗೊತ್ತುಪಡಿಸುತ್ತಿದ್ದ ವೀಕ್ಷಕರು... ಮಾಹಿತಿ ಆಧರಿತವಾದ ಈ ಕಾರ್ಯಕ್ರಮವನ್ನು ಬೆಂಬಲಿಸಿ ಬೇಕಾಗಿರುವುದೆಲ್ಲ ಮಾಡಿಕೊಟ್ಟ ನಮ್ಮ ಚಾನೆಲ್..... ಪ್ರತಿಫಲವಾಗಿ ಮೊದಲಿಗೆ ಅಂಬೆಗಾಲಲ್ಲಿ ಆರಂಭಿಸಿದ ಪಯಣವನ್ನು ತಲೆಯೆತ್ತಿ ನಿಂತು ಮುಂದುವರಿಸಿದ ಜಾಗೃತಿ...

ಬೆಳಗಿನ ಹತ್ತು ಗಂಟೆ ಬೇಡ, ಯಾರೂ ಆಗ ಟೀವಿ ನೋಡಲ್ಲ, ಒಳ್ಳೇ ಟೈಮು ಕೊಡಿ ಎಂದು ಕೇಳಿಕೊಂಡಿದ್ದು, ಸಿಗದಿದ್ದಾಗ, ಬೆಳಗಿನ ಹತ್ತು ಗಂಟೆಗೆ ತಿಳಿವಿನತ್ತ ಪಯಣ ಎಂದು ಪ್ರೋಮೋ ಬಿಟ್ಟು, ಇದ್ದಿದ್ದರಲ್ಲಿಯೇ ಸಾಧ್ಯವಾದಷ್ಟು ಉತ್ತಮವಾಗಿ ಮಾಡಲು ಯತ್ನಿಸಿದ್ದು...

ಹೆದರಿಕೊಂಡೇ ಜಾಗೃತಿ ತಂಡ ಸೇರಿದ ಚೈತ್ರಾ ಪುಟ್ಟಿ, ಹಿಂಜರಿಯುತ್ತಲೇ ಸಂಶಯಗಳನ್ನು ಕೇಳುವ, ಬಗೆಹರಿಯದ ಹೊರತು ಸಮಾಧಾನ ಮಾಡಿಕೊಳ್ಳದ ಮಸೂದ್, ಸದಾ ಕ್ರಿಯೇಟಿವ್ ಆಗಿ ಏನಾದರೂ ಮಾಡುತ್ತಲೇ ಇರಬೇಕೆನ್ನುವ ಸುನಿಲ್, ಅದ್ಭುತ ಪ್ರದರ್ಶನ ಪ್ರತಿಭೆಯ ದಾಮು, ನಗುವಿನಲ್ಲಿಯೇ ಎಲ್ಲ ಮರೆಸುವ ವಿನುತಾ, ಅಭಿಪ್ರಾಯವ್ಯತ್ಯಾಸದಲ್ಲೂ ಆತ್ಮೀಯತೆ ಮೆರೆದ ಶೀಲಾ, ಯಾವುದಕ್ಕಾದರೂ ಹೊಂದಿಕೊಂಡು ಹೋಗುವ ನಿಧಿ... ಜಾಗೃತಿ ತಂಡವೆಂದರೆ ಒಂದು ಕುಟುಂಬ. ದಿನಾ ಸಂಜೆ ಕ್ಯಾಂಟೀನಿನಲ್ಲಿ ಹೋಗಿ ನಮ್ಮ ಗ್ಯಾಂಗ್ ಜತೆ ಕೂತು ಪಟ್ಟಾಂಗ, ಚರ್ಚೆ, ಮೀಟಿಂಗುಗಳು... ಜತೆಗೆ ಮೂರ್ತಿಯ ಸಮೋಸಾ, ಟೀ.. ಶೂಟಿಂಗ್ ಹೋಗಿ ಬಂದವರಿಂದ ಕಥೆ ಕೇಳೋದು, ಭಿಕ್ಷುಕರ ಮೇಲೆ ಎಪಿಸೋಡ್-ಗೆ ಅವರನ್ನ ಚಿತ್ರಿಸಲಿಕ್ಕೆ ಹೋಗಿದ್ದ ಸುನಿಲ್ ಮತ್ತು ಮಂಜು ಅವರ ಕೈಲಿ ಹೊಡೆಸಿಕೊಂಡು ಬಂದಾಗ ಕಳವಳ ಪಟ್ಟಿದ್ದು...

ಅರ್ಥಶಾಸ್ತ್ರದಿಂದ ಹಿಡಿದು ಚುನಾವಣೆಯವರೆಗೆ, ಅಡಿಗೆ, ಆರೋಗ್ಯದಿಂದ ಹಿಡಿದು ಮನೆಕಟ್ಟುವುದರ ವರೆಗೆ, ಸಿಇಟಿಯಿಂದ ಹಿಡಿದು ಪವಾಡದ ಹಿಂದಿನ ವಿಜ್ಞಾನದವರೆಗೆ ಸೂರ್ಯನಡಿಯ ಎಲ್ಲಾ ಟಾಪಿಕ್ಸೂ ಕೈಗೆತ್ತಿಕೊಂಡಿದ್ದು, ಕೆಲವು ಹಿಟ್, ಇನ್ನು ಕೆಲವು ಫ್ಲಾಪ್... ಇದರ ನಡುವೆ ಕಲಿತಿದ್ದು, ಕಲಿಸಿದ್ದು... ವಿವಿಧ ರೀತಿಯ ಪ್ರಯೋಗಗಳು... ಪವಾಡಗಳ ಅನಾವರಣಕ್ಕಾಗಿ ದೊಡ್ಡಬಳ್ಳಾಪುರಕ್ಕೆ ಹೋಗಿ ಹುಲಿಕಲ್ ನಟರಾಜ್ ಅವರ ಸಹಕಾರದಲ್ಲಿ ಶೂಟಿಂಗ್ ಮುಗಿಸಿದ್ದು... ಎಂಥೆಂಥಾ ಬಾಬಾಗಳು ಮಾಡುವ ಪವಾಡಗಳನ್ನೆಲ್ಲಾ ಇವು ಇಷ್ಟೇ ಎಂದು ತೋರಿಸಿ, ನಮಗೆಲ್ಲಾ ಇಷ್ಟವಾಗುವ ಜತೆಗೆ ಜನಮನ ಕೂಡ ಗೆದ್ದ ಸರಣಿ... ವೈಜ್ಞಾನಿಕ ತಳಹದಿ, ತರ್ಕಬದ್ಧ ವಿವರಣೆ, ಸಮದೃಷ್ಟಿಯ ಪ್ರಸ್ತುತಿಯನ್ನು ಜಾಗೃತಿಯ ಯಾವುದೇ ಎಪಿಸೋಡಿನಲ್ಲೂ ಬಿಟ್ಟುಕೊಡದಿರಲು ಯತ್ನ... ಹೀಗೆ ತಿಳಿವಿನತ್ತಲಿನ ಪಯಣದಲ್ಲಿ ಸಾಗುತ್ತ ಸಾಗುತ್ತ 300 ಎಪಿಸೋಡ್ ಆಗಿದ್ದೇ ಗೊತ್ತಾಗಿರಲಿಲ್ಲ... 300ರ ಸಂಭ್ರಮಕ್ಕೆ ಒಂದು ರಾತ್ರಿ ಕೂತು ಖುದ್ದಾಗಿ ತಯಾರಿಸಿದ ಥ್ಯಾಂಕ್ಯೂ ಕಾರ್ಡ್...
++++++++++++

300ರ ನಂತರ ಜಾಗೃತಿಯಿಂದ ನಾ ದೂರವಾದೆ, ಕಾರ್ಯಕ್ರಮ ಅದರ ಪಾಡಿಗದು ನಡೆಯುತ್ತಿತ್ತು. ಬೇರೆ ಕೆಲಸಗಳೆಡೆಯಲ್ಲಿ ನನಗೆ ನೋಡಲಿಕ್ಕೂ ಸಾಧ್ಯವಾಗುತ್ತಿರಲಿಲ್ಲ. ಅಪಾರ ಅನುಭವದ ಬುತ್ತಿ ಕಟ್ಟಿಕೊಟ್ಟಿದ್ದ, ಅದಕ್ಕಾಗಿ ಕೆಲಸ ಮಾಡಿದವರೆಲ್ಲರ ಜಗತ್ತನ್ನು ಶ್ರೀಮಂತವಾಗಿಸಿದ್ದ ಜಾಗೃತಿ, ತನ್ನ ಪಯಣ ಮುಕ್ತಾಯಗೊಳಿಸುತ್ತಿದೆಯೆಂಬ ಸಂದೇಶ ಇದೀಗ ಬಂದಿದೆ...

ನಿಂತಿದ್ದು ಕಾರ್ಯಕ್ರಮ ಮಾತ್ರ, ಅದರ ಹಿಂದಿನ ತತ್ವಗಳಲ್ಲ, ನೀತಿಗಳೂ ಅಲ್ಲ. ಇಷ್ಟೊಂದು ವಿಶಾಲವಾದ ದೃಶ್ಯಮಾಧ್ಯಮದಲ್ಲಿ, ಅಸಂಖ್ಯ ಪ್ರತಿಭೆಗಳಿರುವ ಕನ್ನಡ ದೂರದರ್ಶನಲೋಕದಲ್ಲಿ ಮತ್ತೆ ಅಂತಹದ್ದು ಮೂಡಿಬರುವುದು ಖಂಡಿತ ಕಷ್ಟವಲ್ಲ. ಆದರೆ, ಜಾಗೃತಿ ಪಯಣ ನಿಲ್ಲಿಸುತ್ತಿದೆಯೆಂದು ತಿಳಿದ ಈ ಕ್ಷಣ ಮಾತ್ರ ನಿಜಕ್ಕೂ ಸಂಕಟವಾಗುತ್ತಿದೆ, ಕಣ್ಣಾಲಿ ತುಂಬಿಕೊಂಡಿದೆ.

++++++++++++

Wednesday, April 22, 2009

ಅವಳು, ಬಳ್ಳಿ ಮತ್ತು ನಾನು...

ಮೂರು ತಿಂಗಳ ಹಿಂದೊಂದು ದಿನ. ಹೊಸಮನೆಗೆ ಬಂದ ಸಂಭ್ರಮ. ಆಫೀಸಿಗೆ ರಜೆ ಹಾಕಿದ್ದೆ. ಪ್ಯಾಕಿಂಗ್ ಬಿಡಿಸುವುದು ಸಾಮಾನು ಹೊಂದಿಸುವುದು ಎಲ್ಲಾ ಮುಗಿದು ನಿರಾಳವಾಗಿತ್ತು. ಸಂಜೆ ಹೊತ್ತು ನಮ್ಮಲ್ಲಿದ್ದ ಒಂದೇ ಒಂದು ಚಟ್ಟಿಯಲ್ಲಿರುವ ಒಂದೇ ಒಂದು ಕರವೀರದ ಗಿಡಕ್ಕೆ ಒಂದಿಷ್ಟು ಕಿಚನ್ ಕಾಂಪೋಸ್ಟ್ ಗೊಬ್ಬರ ಹಾಕುತ್ತಿದ್ದೆ. ಆಗ ಕಂಡಿದ್ದು, ಮನೆಯ ಕಾಂಪೌಂಡ್ ಮೇಲೆ ಜೊಂಪೆಯಾಗಿ ಬೆಳೆದು ನಿಂತಿದ್ದ ಮಲ್ಲಿಗೆ ಗಿಡ. ಪುಟ್ಟ ಚಟ್ಟಿಯಲ್ಲಿ ಅದರ ಬೇರುಗಳು ಹಿಡಿಸಲಾಗದಷ್ಟು ದೊಡ್ಡದಾಗಿ ಬೆಳೆದಿತ್ತು.
ಬೇರುಗಳ ನಡುವಲ್ಲಿ ಇನ್ನೂ ಏನೇನೋ ಪುಟ್ಟಪುಟ್ಟ ಗಿಡಗಳು. ಅದರಲ್ಲೊಂದು ಮೆಣಸಿನ ಗಿಡದ ಹಾಗಿತ್ತು. ನೋಡಿ ನಂಗೆ ಆಶ್ಚರ್ಯವಾಯ್ತು. ಅದನ್ನು ಅಷ್ಟು ದೊಡ್ಡದಾಗಿ ಬೆಳೆಸಿದವರಿಗೆ ಮನಸ್ಸಿನಲ್ಲೇ ಒಂದು ನಮಸ್ಕಾರ ಹಾಕಿದೆ. ನನ್ನ ಕೈಲುಳಿದಿದ್ದ ಗೊಬ್ಬರದ ಪುಡಿಯನ್ನು ಅದಕ್ಕೂ ಸ್ವಲ್ಪ ಹಾಕಿ ಮುಗಿಸಿದೆ.
ಅಷ್ಟರಲ್ಲಿ ಆಕೆ ಕೈಯಲ್ಲೊಂದು ಪಾತ್ರೆ ಹಿಡಿದು ಬಂದು, ಗಿಡದ ಹತ್ತಿರ ನಿಂತಳು. ಕೈಯಲ್ಲಿದ್ದ ಪಾತ್ರೆಯಲ್ಲಿ, ತೊಳೆಯಲೆಂದು ನೀರಲ್ಲಿ ಹಾಕಿದ ಅಕ್ಕಿ. ಚೆನ್ನಾಗಿ ಅಕ್ಕಿ ತೊಳೆದು, ನೀರನ್ನು ಜಾಗ್ರತೆಯಾಗಿ ಗಿಡದ ಬುಡಕ್ಕೆ ಚೆಲ್ಲಿದಳು.
ಓಹ್, ಹಾಗಾದ್ರೆ ದಿನಾ ಈಕೆ ಅಕ್ಕಿ-ಬೇಳೆ ತೊಳೆದ ನೀರಲ್ಲೇ ಮಲ್ಲಿಗೆ ಗಿಡ ಬದುಕುತ್ತಿದೆ - ಎಂದು ಗೊತ್ತಾಯ್ತು. ಅದರ ಬುಡದಲ್ಲಿದ್ದ ಪುಟ್ಟಪುಟ್ಟ ಗಿಡಗಳೂ ಹೇಗೆ ಹುಟ್ಟಿರಬಹುದು ಅಂತ ಒಂದು ಐಡಿಯಾ ಬಂತು. ಇಂಥಾ ಐಡಿಯಾಗಳು ನಂಗೆ ಹೊಳೆಯಲೇ ಇಲ್ಲವಲ್ಲ ಅಂತನಿಸಿತು.
ಆಕೆ ನಮ್ಮನೆ ಹಿಂದಿನ ಮನೆಯಲ್ಲಿ ಬಾಡಿಗೆಗಿರುವವಳು. ನಂಗಿನ್ನೂ ಅವಳ ಪರಿಚಯವಾಗಿರಲಿಲ್ಲ. ನಾನು ಗೊಬ್ಬರ ಹಾಕಿದ್ದು ಗಮನಿಸಿದ ಆಕೆ ಅದೇನು, ಎಲ್ಲಿಂದ ಅಂತ ಕೇಳಿದಳು. ಹೇಳಿದೆ. ಕೇಳಿಸಿಕೊಂಡ ಆಕೆ ಹೀಗೂ ಮಾಡ್ಬಹುದು ಅಂತ ಗೊತ್ತಿರಲಿಲ್ಲ ಅಂತ ಖುಷಿಪಟ್ಟಳು. ನಮ್ಮ ಚಟ್ಟಿಯನ್ನು ಕೂಡ ಬಿಸಿಲಿಗೋಸ್ಕರ ಕಾಂಪೌಂಡ್ ಮೇಲೇರಿಸುವಂತೆ ಸಲಹೆ ಕೊಟ್ಟಳು. ನಾನು ಪಾಲಿಸಿದೆ.
ಹಾಗೇ ಮನೆಗೆ ಬೇಕಾದ ಕೊತ್ತಂಬ್ರಿ ಸೊಪ್ಪು ಅದರಲ್ಲೇ ಬೆಳೆಸಿಕೊಳ್ಳಬಹುದು, ಚಟ್ಟಿಯಲ್ಲಿ ನಾಲ್ಕು ಕಾಳು ಕೊತ್ತಂಬರಿ ಹಾಕಿ ಎಂದು ಸಲಹೆ ಕೊಟ್ಟಳು. ನಂಗೆ ಎಲ್ಲಿಲ್ಲದ ಉತ್ಸಾಹ ಬಂತು, ಇಷ್ಟೆಲ್ಲ ಮಾಡಬಹುದು, ಆದ್ರೂ ಇಷ್ಟು ದಿನ ಸುಮ್ನಿದ್ನಲ್ಲ, ಅಂತನಿಸಿತು. ಖುಷಿಯಿಂದಲೇ ನಾನದನ್ನು ಪಾಲಿಸಿದೆ. ಕೊತ್ತಂಬರಿ ಮಾತ್ರವಲ್ಲ, ಅಡಿಗೆ ಮನೆಯಲ್ಲಿ ಏನೇನು ಸಿಕ್ಕಿತೋ ಎಲ್ಲದರದ್ದೂ ನಾಲ್ಕು ನಾಲ್ಕು ಕಾಳು, ಜತೆಗೆ ಕಸದ ಬುಟ್ಟಿಗೆ ಬಿಸಾಡಲೆಂದು ಇಟ್ಟಿದ್ದ ಕಲ್ಲಂಗಡಿ ಹಣ್ಣಿನ ಬೀಜಗಳು, ಎಲ್ಲವನ್ನೂ ಹಾಕಿ, ಗೊಬ್ಬರದ ಜತೆಗೆ ಸೇರಿಸಿ ಕೆದಕಿದೆ. ಅಡಿಗೆಗೆಂದು ಕಟ್ ಮಾಡಿಟ್ಟಿದ್ದ ಪಾಲಕ್ ಸೊಪ್ಪಿನ ಬೇರನ್ನು ಅದರ ಮೇಲಿಂದ ಹಾಕಿ ಮುಚ್ಚಿ, ನೀರು ಹಾಕಿದೆ.
+++++++++++++++++++
ದಿನಾ ಬೆಳಿಗ್ಗೆ ಬೇಗ ಎದ್ದು ಮನೆಹೊರಗೆ ನೀರು ಹಾಕಿ ಗುಡಿಸುವಾಗ ಎರಡೂ ಗಿಡಗಳಿಗೆ ನೀರು ಹಾಕುತ್ತಿದ್ದೆ. ಆಕೆಯೂ ಅಕ್ಕಿ -ಬೇಳೆ ತೊಳೆದ ನೀರನ್ನು ಎರಡೂ ಚಟ್ಟಿಗಳಿಗೆ ಹಂಚುತ್ತಿದ್ದಳು. ಈ unsaid understanding ನಂಗೆ ಖುಷಿ ಕೊಟ್ಟಿತು. ಕೆಲ ದಿನಗಳ ನಂತರ ಚಟ್ಟಿಯಲ್ಲಿ ಎರಡು ಮೂರು ಥರದ ಮೊಳಕೆಗಳು ಕಾಣಿಸಿಕೊಂಡವು. ಅದು ಯಾವುದರದ್ದು ಎಂದು ನಂಗೆ ಗೊತ್ತಾಗಲಿಲ್ಲ.
ಮತ್ತೊಂದು ದಿನ ಹೀಗೇ ಸಿಕ್ಕಿದ ಆಕೆ ನಂಗೆ 'ಸಾಸಿವೆ ಗಿಡ ಹುಟ್ಟಿತ್ತು ಕಣ್ರೀ, ಕಿತ್ತು ಬಿಸಾಕಿದ್ದೇನೆ, ಮನೆಮುಂದೆ ಸಾಸಿವೆ ಗಿಡ ಇರಬಾರದು' ಅಂದಳು.
ಸಾಸಿವೆ ಕಾಳು ಚಟ್ಟಿಗೆ ಸೇರಿಸಿದ್ದು ನಾನೇ ಆಗಿದ್ದರಿಂದ ಸುಮ್ಮನೆ ತಲೆಯಲ್ಲಾಡಿಸಿದೆ. ಆದರೆ ಇನ್ನೂ ಒಂದೆರಡು ಗಿಡಗಳು ಉಳಿದುಕೊಂಡಿತ್ತು. ಅದೇನು ಅಂತ ಕೇಳಿದೆ. ಒಂದು ಹೆಸರು ಕಾಳಿನ ಗಿಡವಿರಬೇಕು, ಇನ್ನೊಂದು ನಂಗೂ ಗೊತ್ತಾಗ್ತಿಲ್ಲ, ಕೊತ್ತಂಬರಿ ಮಾತ್ರ ಬಂದಿಲ್ಲ ಅಂದಳು. ಅದೇನಾದ್ರೂ ಇರಲಿ, ಅದಾಗಿ ಬೆಳೆದಿದ್ದು ಬೆಳೆಯಲಿ ಎಂದು ಸುಮ್ಮನಾದೆ.
+++++++++++++++++++
ನಂತರ ನನ್ನ ಶಿಫ್ಟ್ ಬದಲಾಯ್ತು, ರಾತ್ರಿ ಪಾಳಿ ಮುಗಿಸಿ ಮನೆಗೆ ಬರುವಷ್ಟರಲ್ಲಿ ಕಣ್ಣು ಎಳೆಯುತ್ತಿರುತ್ತಿತ್ತು. ಬಿದ್ದುಕೊಂಡರೆ ಸಾಕೆನಿಸುತ್ತಿತ್ತು. ಸಂಜೆ ಎದ್ದನಂತರ ಮನೆಯಿಂದಲೇ ಕೆಲಸ ಆರಂಭವಾಗುತ್ತಿತ್ತು. ಈ ಬದಲಾದ ದಿನಚರಿಯಲ್ಲಿ ಗಿಡದ ಕುರಿತು ಗಮನವೇ ಹೊರಟುಹೋಯ್ತು. ದಿನಕ್ಕೆ ಐದು ನಿಮಿಷ ಹೊರಗೆ ಹೋಗಿ ಗಿಡಗಳು ಏನಾಯ್ತು ಅಂತ ನೋಡುವಷ್ಟು ಕೂಡಾ ಪುರುಸೊತ್ತಿಲ್ಲದಷ್ಟು ನಾನು 'ಬ್ಯುಸಿ' ಆಗಿಬಿಟ್ಟಿದ್ದೆ... busy for nothing ofcourse.
+++++++++++++++++++
ಮೊನ್ನೆ ಬೆಳಿಗ್ಗೆ ಮನೆಯ ಗೇಟ್ ತೆಗೆದು ಒಳನುಗ್ಗುತ್ತಿದ್ದಂತೆಯೇ ಕಣ್ಣು ಅದ್ಯಾಕೋ ಕಾಂಪೌಂಡ್ ಗೋಡೆ ಮೇಲೆ ಹರಿಯಿತು. ಬಳ್ಳಿಯಾಗಿ ಮೆಲ್ಲಮೆಲ್ಲಗೆ ಹಬ್ಬಲಾರಂಭಿಸಿದ್ದ ಗಿಡ ಕಂಡು ಆಶ್ಚರ್ಯವಾಯಿತು. ಅದರ ಪಕ್ಕದಲ್ಲಿದ್ದ ಮತ್ತೊಂದು ಗಿಡ ಹೆಸರಿನ ಗಿಡವೆಂದು ಗೊತ್ತಾಯಿತು, ಆದರೆ ಏನೇನೋ ಬೀಜಗಳನ್ನು ಹಾಕಿದ್ದೆನಾದ್ದರಿಂದ ಬಳ್ಳಿಯಾಗಿದ್ದು ಯಾವುದರ ಗಿಡವೆಂದು ಗೊತ್ತಾಗಲಿಲ್ಲ.
ಮೆಲ್ಲಮೆಲ್ಲಗೆ ಚಿಗುರೊಡೆದು ಹಬ್ಬುತ್ತಿದ್ದ ಬಳ್ಳಿ, ಇನ್ನು ತನ್ನನ್ನು ಹಾಗೇ ಬೇಕಾಬಿಟ್ಟಿ ಬಿಟ್ಟಲ್ಲಿ ಎಲ್ಲೆಲ್ಲಿಗೂ ಹಬ್ಬಿಯೇನು ಅಂತ ಮೌನದಲ್ಲೇ ವಾರ್ನಿಂಗ್ ಕೊಡುತ್ತಿತ್ತು. ಇದಕ್ಕೇನಾದ್ರೂ ಮಾಡಬೇಕು, ಏನಾದ್ರೂ ಸಪೋರ್ಟ್ ಕೊಟ್ಟು ಸರಿಯಾದ ರೀತಿ ಹಬ್ಬಲಿಕ್ಕೆ ಸಹಾಯ ಮಾಡಬೇಕು ಅಂದುಕೊಂಡು ಒಳಗೆ ಬಂದೆ. ಅಷ್ಟೆ. ಮತ್ತೆ busy for nothing. ಮರೆತೇ ಹೋಯಿತು.
+++++++++++++++++++
ಇವತ್ತು ರಾತ್ರಿ ಪಾಳಿ ಮುಗಿಸಿ ಬಂದು ಮಲಗಿದವಳಿಗೆ ಬೇಗ ಎಚ್ಚರವಾಯ್ತು... ಎದ್ದು ನೋಡುತ್ತೇನೆ, ಹೊರಗೆ ಜೋರು ಮಳೆ. ಒಳಗೂ ಮಳೆ.
ಬಾಗಿಲು ತೆರೆದು ಹೋಗಿ ಸುಮ್ಮನೆ ಮಳೆ ನೋಡುತ್ತ ನಿಂತೆ. ಹಾಗೇ ಬಳ್ಳಿಯ ಕಡೆಗೂ ಗಮನ ಹರಿಯಿತು. ಅದು ಮಲ್ಲಿಗೆ ಬಳ್ಳಿಗೆ ಸುತ್ತಿಕೊಳ್ಳಲಾರಂಭಿಸಿತ್ತು. ಮತ್ತೆ ಅದೇ ಯೋಚನೆ, ಇದು ಹೇಗೆಹೇಗೋ ಬೆಳೆದರೆ ಸುಮ್ಮನೇ ತೊಂದರೆ. ಜತೆಗೆ ಓನರ್ ಕೈಲಿ ಬೇರೆ ಬೈಸಿಕೊಳ್ಳಬೇಕು. ಏನ್ ಮಾಡಲಿ? ಕಾಂಪೌಂಡ್ ಮುಂದೆ ನೇರವಾಗಿ ರಸ್ತೆ. ಕಾಂಪೌಂಡ್ ಒಳಗಿರುವುದು ಹೋಗುವ-ಬರುವ ದಾರಿ. ಹಬ್ಬಿಸಿದರೆ ಮೇಲಕ್ಕೆ ಹಬ್ಬಿಸಬೇಕು, ಅದಕ್ಕೆ ಓನರ್ ಅನುಮತಿ ಬೇಕು.
ಆಕೆ ಕೂಡ ನನ್ನ ಪಕ್ಕದಲ್ಲಿ ಬಂದು ನಿಂತಿದ್ದಳು. ಅವಳಿಗೂ ಅದೇ ಚಿಂತೆಯಿತ್ತು... ಮಲ್ಲಿಗೆ ಬಳ್ಳಿಗೆ ಹಬ್ಬಿದ್ದನ್ನು ಮೆಲ್ಲಗೆ ಬಿಡಿಸಿ ಕೆಳಗೆ ನೇತಾಡಬಿಟ್ಟಳು.. ಇದಕ್ಕೊಂದು ವ್ಯವಸ್ಥೆ ಆಗಬೇಕು ಎಂದಳು, ನನ್ನನ್ನುದ್ದೇಶಿಸಿ. ನಾನು ಸುಮ್ಮನೇ ನಕ್ಕು ತಲೆಯಲ್ಲಾಡಿಸಿದೆ.
ಮಳೆ ಜೋರಾಗಿ ಹನಿಯುತ್ತಿತ್ತು. ಬಳ್ಳಿ ಇದ್ಯಾವುದರ ಗಮನವಿಲ್ಲದೆ ರಾಚುತ್ತಿದ್ದ ಹನಿಗಳಿಗೆ ಮೈಯೊಡ್ಡಿ ಸುಖವಾಗಿ ನಗುತ್ತಿತ್ತು.