Showing posts with label ಸ್ವಗತ. Show all posts
Showing posts with label ಸ್ವಗತ. Show all posts

Wednesday, September 26, 2018

ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ

Image may contain: one or more people
(ಕಾಮನಬಿಲ್ಲು, ಓನಾಮ, ಮಜಲು, ಎಂಜಿರೋಡ್)
ಎಂ ಜಿ ರೋಡಿನ ತುಂಬೆಲ್ಲ ಹೂಳಿದ
ಕರಿಕಾಂಕ್ರೀಟಿನ ಕಂಬಗಳ
ಮೈ ತಿಕ್ಕಿತೊಳೆದು
ಪೋಸ್ಟರುಗಳಿಗೆ ಓನಾಮ ಹಾಕಿ
ಹೊಸ ಬಣ್ಣ ಮೆತ್ತಿದಾಗ
ಮಜಲುಮಜಲಲ್ಲೂ ಕಾಣುವುದು
ಬರೀ ಕೆಂಪುಕಂಬಗಳಲ್ಲ,
ಕಾಮನಬಿಲ್ಲೂ ಕೂಡ.
ಕಾಣಬೇಕೆಂಬವರಿಗೆ ಕಾಣುತ್ತದೆ
ಮಳೆಯಿಲ್ಲದ ಬರಡುಬಾನಿನ
ಎಂಜಿರೋಡಿನ ಭುವಿಯಲ್ಲೂ
ಹಾಸಿ ಕಾಡುವ ಕಾಮನಬಿಲ್ಲು

===================

(ಪುನೀತ -ದರ್ಶನ- ಯಶ- ಸುದೀಪ)
ಬೆಂಗಳೂರ ಆಷಾಢವೆಂದರೆ ಹೀಗೆ...
ಯಾವಾಗಲೋ ಬರುವ ಮಳೆ,
ಹೊರಹೋದರೆ ಕೊಚ್ಚೆಕೊಳಕು,
ಒಂದಿನವೂ ಇರದಾಗದ ಟ್ರಾಫಿಕ್ ಜಾಮು
ಎಲ್ಲೆಲ್ಲೂ ಡಿಸ್ಕೌಂಟ್ ಸೇಲು..
ಮನೆಯೊಳಗೆ ಅಮ್ಮನ ಕೈಯಡುಗೆ,
ಚಳಿಜ್ವರ, ಕಷಾಯ, ಟ್ಯಾಬ್ಲೆಟ್ಟು,
ಉಪಚಾರ, ಬುದ್ಧಿಮಾತು,
ನನಗೆ ಮಾತ್ರ ನಿನ್ನದೇ ಧ್ಯಾನ
ಎಲ್ಲರೂ ಶ್ರಾವಣಕ್ಕೆ ಚಾತಕವಾದರೆ
ನಾ ಮಾತ್ರ ಇನ್ನೆಲ್ಲಿವರೆಗೆ ಕಾಯಬೇಕೋ,
ಅದ್ಯಾವಾಗಲೋ ನಿನ್ನ ದರ್ಶನ?
ಹೊದಿಕೆಯೊಳಗಿನ ಬಿಸುಪು,
ನೀತಂದ ಕನವರಿಕೆಯ ಕೋಶ,
ಅದೇನೋ ಅರಿಯದ ಆತಂಕ,
ವಿಷ್ಣು ಸಹಸ್ರನಾಮ ದಿನಾ ಕೇಳಿದರೆ
ಯಶಂ ಪ್ರಾಪ್ನೋತಿ ವಿಪುಲಂ ಅನ್ನುತ್ತಾಳೆ
ಕಂಪ್ಯೂಟರಿನೊಳಗಿಂದ ಸುಬ್ಬುಲಕ್ಷ್ಮಿ
ಅದ್ಹೇಗೆ ಅಮ್ಮ, ಅಂದರೆ ನನ್ನಮ್ಮ ಬೈಯುತ್ತಾಳೆ,
ಹೊತ್ತಾಯಿತು ಮಲಕೋ ಕೂಸೇ,
ಸಾಕು ತಲೆಹರಟೆ, ಆರಿಸು ದೀಪ.

=======
(ಗಮನ-ಗಹನ-ಗಗನ-ಬೆಂಡೆಕಾಯಿ)
ಬೆಂಡೆಕಾಯಿ ಬೆಳೆಸುವುದೆಂದರೆ ಸುಮ್ಮನೆಯಲ್ಲ
ಬೇಕದಕೆ ಬಹಳ ತಿಳುವಳಿಕೆ, ಅದು ಆಟವಲ್ಲ
ಮಣ್ಣು ಗೊಬ್ಬರ ಹಾಕಿ ಬೀಜ ಬಿತ್ತು
ಹಕ್ಕಿತಿನ್ನದಿರಲಿ, ಅದಕ್ಕೊಂದು ಕೋಟೆ ಕಟ್ಟು
ನೀರು ಹಾಕು, ಹೆಚ್ಚೂ ಬೇಡ, ಕಡಿಮೆಯೂ ಬೇಡ
ನೆರಳಿರಲಿ, ಬೆಳಕಲ್ಲಿ ಬೀಜ ಚಿಗುರೊಡೆಯುವುದು ತಡ
ಮೊಳಕೆ ಬಂದೀತು ಇನ್ನೇನು, ಗಮನವಿರಲಿ,
ಎಳೆಚಿಗುರು ತಿನ್ನಲು ಓಡಿಬರುವವು ಹೆಗ್ಗಣ, ಇಲಿ..
ಗಿಡ ಬಂತೇ, ಮನೆಯ ಚಿಳ್ಳೆಪಿಳ್ಳೆಗಳಿಗೆ ಬಲು ಖುಷಿ
ನೀರು ಹಾಕುವ ಭರಕೆ ಗಿಡದ ಬುಡವೆಂದೂ ಹಸಿಹಸಿ
ಮತ್ತೆ ಸುರಿ ಗೊಬ್ಬರ, ಇದು ಮಗುವಿಗಿಂತ ಹೆಚ್ಚು
ತಾನೆ ಬೆಳೆವ ತರಕಾರಿ ಅಂದ್ರೆ ಅದೊಂದು ಹುಚ್ಚು
ಹಂತ ಹಂತಕ್ಕೆ ಚಿತ್ರ ತೆಗೆದು ಫೇಸ್ಬುಕ್ಕಲ್ಹಾಕು
ಲೈಕು ಕಮೆಂಟು ಶೇರು ಆಹಾ ಎಂಥಾ ಶೋಕು
'ಓಹ್, ಇದ್ಯಾಕೆ ಮುರುಟಿದೆ ಎಲೆ,' ಅಂತಾರೆ ಗೆಳತಿ
'ಹಾಗ್ಮಾಡು ಹೀಗ್ಮಾಡು' ಚರ್ಚೆ ಮುಟ್ಟುತ್ತದೆ ಗಹನಗತಿ
ಅಂತೂ ಇಂತೂ ಬಂತು ಹೂವು, ಎಲ್ಲೆಲ್ಲೂ ಖುಷಿ ಖುಷಿ
ಅಗೋ ಎಳೆಕಾಯಿಯೂ ಬಂತು, ಈಗ ತಟ್ಟುತ್ತಿದೆ ಬಿಸಿ
ಪಕ್ಕದ್ಮನೆ ಆಂಟಿ ಕಣ್ಣಿಂದ ಹೇಗೆ ಕಾಪಾಡಲಿ ಇದನು?
ಹಾಕು ಪುಟ್ಟುಕೂಸಿನ ಸುಸ್ಸು, ಎಕ್ಸೆಲೆಂಟ್ ಪ್ಲಾನು :-)
ಹಾಕಿದರೆ ಸಾಕೇ, ಹೇಳು, ಇದೇ ಗೊಬ್ಬರ ನಮ್ಮನೇಲಿ..
ಆಂಟಿ ಕೇಳಬೇಕು, ಅಂದುಕೊಳ್ಳಬೇಕು, ನಂಗ್ಬೇಡ, ಅಲ್ಲೇ ಇರ್ಲಿ
ಪೇಟೆಯಲ್ಲಿ ಬೆಂಡೆಕಾಯಿ ಬೆಲೆ ಮುಟ್ಟಿದೆ ಗಗನ
ನಾ ಕಷ್ಟಪಟ್ಟು ಉಳಿಸಿದ ಬೆಂಡೆಕಾಯಿ, ಬೆಲೆಕಟ್ಟಲಾಗದ ರತ್ನ!

( :-P :-P :-P ಪಕ್ಕದ್ಮನೆ ತರಕಾರಿ ಕದಿಯೋ ಎಲ್ಲಾ ಆಂಟಿಯರ ಕ್ಷಮೆಕೋರಿ )


Friday, October 20, 2017

ಯಾರಿಗೆಷ್ಟು ಬೇಕೋ ಅಷ್ಟು ಬೆಳಕು, ಕತ್ತಲು ದಕ್ಕಲಿ....



ಕತ್ತಲು ಮತ್ತು ಬೆಳಕಿನ ನಡುವಿನ ಸಂಬಂಧ ಇಂದು ನಿನ್ನೆಯದಲ್ಲ. ಒಂದಿಲ್ಲದೆ ಇನ್ನೊಂದಿಲ್ಲ, ಒಂದಿಲ್ಲದೆ ಇನ್ನೊಂದಕ್ಕೆ ಬೆಲೆಯೂ ಇಲ್ಲ. ನಾಣ್ಯವೊಂದರ ಎರಡು ಮುಖಗಳಂತೆ ಇವು. ಎರಡೂ ಇದ್ದರೇ ಜೀವನ ಪೂರ್ಣ. ನಿತ್ಯದ ಕೆಲಸ ಕಾರ್ಯಗಳನ್ನು ಮುಗಿಸಲು ಬೆಳಕಿನ ಸಾಂಗತ್ಯ ಬೇಕು. ನಂತರದ ವಿಶ್ರಾಂತಿಗೆ ಕತ್ತಲಿನ ಮಡಿಲೇ ಬೇಕು.
ನಿಶೆ ಕನಸು ಹೊತ್ತು ತರುವವಳು, ಭರವಸೆಯ ಬೀಜ ಮನದಲ್ಲಿ ಬಿತ್ತುವವಳು. ಆದರೆ, ಉಷೆಯ ಸಹಕಾರವಿಲ್ಲವಾದಲ್ಲಿ ಇವು ನನಸಾಗುವುದು ಸಾಧ್ಯವೇ? ಉಷೆ ಪ್ರೋತ್ಸಾಹಿಸುವ ಕಾರ್ಯಶೀಲತೆ, ಚಟುವಟಿಕೆಗಳ ಮೂಲಕವೇ ಕನಸುಗಳಿಗೆ ರೆಕ್ಕೆ ಮೂಡಿ ಜೀವತಳೆಯಬೇಕು.. ಹಾಗೇ ಕನಸಿಲ್ಲದ, ಕತ್ತಲೆಯ ನೆಮ್ಮದಿಯಿಂದ ವಂಚಿತವಾದ ಜೀವನವೂ ಒಂದು ಜೀವನವೇ? ಸದಾ ಬೆಳಕು ತುಂಬಿದ ಕೋಣೆಯಲ್ಲಿ ನೆಮ್ಮದಿಯ ನಿದ್ದೆ ಸಾಧ್ಯವೇ?
ಬೆಳಕು-ಕತ್ತಲೆ - ಇವೆರಡರಲ್ಲಿ ಒಂದು ಮಾತ್ರ ಶ್ರೇಷ್ಠವೆಂದು ಪ್ರತಿಪಾದಿಸುವ 'ತಮಸೋಮಾ ಜ್ಯೋತಿರ್ಗಮಯ' ಎಂಬ ಘೋಷಣೆ, ಹುಲುಮಾನವರು ಅತಿ ಬುದ್ಧಿವಂತಿಕೆಯಿಂದ ಮಾಡಿದ ರಾಜಕಾರಣ—ಅಷ್ಟೇ.
******************
ಕಾರ್ಗತ್ತಲ ಹಾದಿ... ಮನೆ ದೂರ, ಕನಿಕರಿಸಿ ನನ್ನ ಕೈಹಿಡಿದು ನಡೆಸು ಬೆಳಕೇ, ಬಾ ಎಂದು ಕೇಳಿದ ಕವಿಗೆ ಈ ರಾಜಕಾರಣದ ಅರಿವಿದ್ದಿರಲಾರದು. ಇದ್ದಿದ್ದರೆ, ಹಾದಿ ತಪ್ಪಿದಾಗ ಕತ್ತಲ ದಾರಿಗೆ ಬೇಕಾದ ಕೈದೀಪ ಮನದೊಳಗೇ ಇದೆ ಎಂಬುದರ ಅರಿವೂ ಆತನಿಗೆ ಆಗಿರುತ್ತಿತ್ತು. ಎಲ್ಲೋ ಇರುವ ಬೆಳಕಿಗೆ ಹಾತೊರೆಯುವ ಬದಲು ಒಳಗಿನ ಬೆಳಕನ್ನು ಆತ ಕಂಡುಕೊಳ್ಳುತ್ತಿದ್ದನೇನೋ...
******************
ಕೆಲವು ವಿಧದ ಬೆಳಕುಗಳು ಅಪಾಯಕಾರಿಯೂ ಹೌದು... ಮಡಿಲಲ್ಲಿರುವ ನಿಗಿನಿಗಿ ಸುಡುವ ಕೆಂಡ ಬೆಳಕೇನೋ ನಿಜ. ಆದರೆ ಅದಕ್ಕೆ ಹಾಕಬೇಕಿರುವುದು ನೀರು, ಇದ್ದಲು ಅಥವಾ ಸೌದೆಯಲ್ಲ. ಸೌದೆ ಹಾಕಿದಲ್ಲಿ ಅದು ಮಡಿಲು ಸುಡುವುದು ಖಚಿತ. ಸುಡುವ ಸತ್ಯಕ್ಕೆ ನೀರು ಹಾಕುವವರು ಬೆಳಕನ್ನು ನಂದಿಸಿದರು, ಸತ್ಯವನ್ನು ಅಡಗಿಸಿದರು ಎಂಬ ಇನ್ನೊಂದು ರೀತಿಯ ಅಪವಾದಕ್ಕೂ ಒಳಗಾಗಬೇಕಾಗುತ್ತದೆ.
ಕುಶಾಲಿಗೆಂದು ಹಚ್ಚುವ ಬಣ್ಣಬಣ್ಣದ ಬಿರುಸುಮತಾಪುಗಳೂ ಅಷ್ಟೆ. ಬಣ್ಣ ಬರಬೇಕೆಂದು ಅದಕ್ಕೆ ಹಾಕುವ ವಿಧವಿಧದ ಪದಾರ್ಥಗಳಿಂದ ಹಾನಿಕಾರಕವಾಗಿ ಬದಲಾಗುತ್ತವೆ. ತಮಾಷೆ ನೋಡುವ ಭರದಲ್ಲಿ ಮಗು ಹಚ್ಚುವ ಬೆಳಕಿನ ಪುಂಜ ಹಾದಿಯಲ್ಲಿ ಹೋಗುವವರ ಕಣ್ಣು ತೆಗೆದರೂ ತೆಗೆದೀತು, ಸಿಕ್ಕಿದ್ದಕ್ಕೆ ಬೆಂಕಿ ಹಚ್ಚಿದರೂ ಹಚ್ಚೀತು.
******************
ಈ ಬೆಳಕಿನ ಹುಚ್ಚು ಇನ್ನೂ ಹಲವು ಬಗೆ ಅನಾಹುತಗಳಿಗೆ ಕಾರಣವಾಗುತ್ತದೆ. ಅರ್ಧ ಜಗತ್ತಿಗೆ ಕತ್ತಲೆ ಯಾವಾಗಲೂ ಇರುತ್ತದೆ. ಇನ್ನರ್ಧಕ್ಕೆ ಬೆಳಕು. ಆದರೆ ಕತ್ತಲಲ್ಲಿರುವವರೂ ಕೃತಕ ಬೆಳಕು ಸೃಷ್ಟಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳುವುದು ನಿಜ ತಾನೇ. ಬೆಳಕಿನ ಶ್ರೇಷ್ಠತೆ ಬರುವುದು ಇದರಿಂದಲೇ. ಬೆಳಕಿನ ಬೆಲೆ ವ್ಯಾವಹಾರಿಕವಾಗಿ ಜಾಸ್ತಿ. ಬೆಳಕು ಕತ್ತಲೆಯನ್ನು ಮೀರಿ ನಮ್ಮನ್ನು ಮುನ್ನಡೆಸುವ ಸಾಧನ, ಮತ್ತು ಇದರ ಅವಶ್ಯಕತೆ ಎಲ್ಲರಿಗೂ ಇದೆ. ಬೆಳಕಿಲ್ಲದೇ ಬದುಕು, ವ್ಯವಹಾರ ಯಾವುದೂ ಇಲ್ಲ. ಅದಕ್ಕೇ ತಮಸೋಮಾ ಜ್ಯೋತಿರ್ಗಮಯ ಅಂದರು. ತಪ್ಪಲ್ಲ, ಆದರೆ ಅದು ಬೆಳಕಿಗೆ ಅಗತ್ಯಕ್ಕಿಂತ ಹೆಚ್ಚಿನ ತೂಕ ಕೊಟ್ಟು, ಕತ್ತಲೆ ಕೆಟ್ಟದೆಂಬಂತೆ ತೋರಿಸುತ್ತದೆಯಲ್ಲವೇ? ಅದೇ ಸಮಸ್ಯೆ.
 
******************
ಎಲ್ಲೋ ಇರುವ ಬೆಳಕಿಗೆ ಹಾತೊರೆಯುವುದರಿಂದ ಏನು ತೊಂದರೆ? ಒಂದು ವಸ್ತು ಯಾವುದೋ ರೀತಿಯಲ್ಲಿ ಅಗತ್ಯ ಎನ್ನುವ ಅರಿವು, ಆ ವಸ್ತುವಿನ ಬೆಲೆಯನ್ನು ಹೆಚ್ಚಿಸುತ್ತದೆ. ಮತ್ತು ನಕಲಿ ವ್ಯವಹಾರಗಳಿಗೆ ಎಡೆಮಾಡಿಕೊಡುತ್ತದೆ. ಕಲಬೆರಕೆಗಳು ಹೆಚ್ಚುತ್ತವೆ.
ಬೆಳಕಿನ ವಿಚಾರದಲ್ಲೂ ಅಷ್ಟೇ. ಕತ್ತಲಿಗೂ ಬೆಳಕಿನ ವೇಷ ತೊಡಿಸಿ ಮಾರುವವರು ಹುಟ್ಟಿಕೊಳ್ಳುತ್ತಾರೆ. ಅಂಗೈಯ ಕಿಟಿಕಿಯಲ್ಲಿ ವಿಶ್ವ ನೋಡಬಹುದಾದಷ್ಟು ಬೆಳಕಿರುವ ಈ ಕಾಲಘಟ್ಟದಲ್ಲಿಯೂ ಕಿಟಿಕಿಯಲ್ಲಿ ಕೋಣೆ ತೋರಿಸಿ ಅದನ್ನೇ ವಿಶ್ವವೆಂದು ಮಾರಾಟ ಮಾಡುವವರು ಕಡಿಮೆಯಿಲ್ಲ. ಕತ್ತಲೆಯನ್ನು ಬೆಳಕನ್ನಾಗಿಸಿ, ಬೆಳಕನ್ನು ಕತ್ತಲೆಯಾಗಿಸಿ ಆಟವಾಡುವವರ ಸಂಖ್ಯೆ ಬಲುಜಾಸ್ತಿ. ಅರೆಗತ್ತಲೆಯಲ್ಲಿ ಅಥವಾ ಬಣ್ಣದ ಬೆಳಕಲ್ಲಿ ಏನು ಮಾಡಿದರೂ ಚಂದ—ಹಾಲಿಗೆ ಹುಳಿ ಹಿಂಡಬಹುದು, ಮನಸ್ಸುಗಳನ್ನು ಒಡೆಯಬಹುದು, ವಿಷಬೀಜ ಬಿತ್ತಬಹುದು. ತಮ್ಮೊಳಗಿನ ಬೆಳಕನ್ನು ನಂಬದ, ತಮ್ಮ ತಿಳುವಳಿಕೆಯಲ್ಲಿ ನಂಬಿಕೆಯಿಲ್ಲದ ಜನವನ್ನು ಹೇಗೆ ಬೇಕಾದರೂ ಆಟವಾಡಿಸಬಹುದು.
******************
ನಮ್ಮೊಳಗಿನ ತಿಳಿವಿನ ಬೆಳಕು ಎಷ್ಟು ಕಡಿಮೆಯೋ, ಬಾಹ್ಯದಲ್ಲಿ ಕಾಣುವ ಬೆಳಕು ನಮಗೆ ಅಷ್ಟೇ ಭೀಕರವೆನಿಸುತ್ತದೆ. ಬೆಳಕಿನ ಸಹವಾಸವೇ ಬೇಡವೆನಿಸಿ ಬೆಳಕಿಗೊಂದು ನಮಸ್ಕಾರ ಹಾಕಿ ಕತ್ತಲಲ್ಲೇ ಇರುತ್ತೇವೆ ಎಂಬ ಜನಕ್ಕೇನೂ ಕಡಿಮೆಯಿಲ್ಲ. ಬೆಳಕಿನ ಕುರಿತು ವ್ಯಂಗ್ಯವಾಡುವವರಿಗೂ ಕಡಿಮೆಯಿಲ್ಲ.
ಆದರೆ ಇಷ್ಟು ಮಾತ್ರ ನಿಜ. ಕತ್ತಲೆ-ಬೆಳಕು ಎರಡೂ ಜೀವನಕ್ಕೆ ಅವಶ್ಯಕ. ಯಾರೋ ಹೊಗಳಿದರೆಂದು ಬೆಳಕು ಹಿಗ್ಗುವುದಿಲ್ಲ, ಇನ್ಯಾರೋ ತೆಗಳಿದರೆಂದು ಕತ್ತಲೆ ಕುಗ್ಗುವುದಿಲ್ಲ. ಕತ್ತಲೆಯ ಕೆಲಸವೇ ಬೇರೆ. ಬೆಳಕಿನ ಕೆಲಸವೇ ಬೇರೆ. ಕತ್ತಲಿನಲ್ಲಿ ಬೆಳೆಯುವ ಹೂವು ಅರಳಲು ಸೂರ್ಯಕಿರಣಗಳು ತಾಗಲೇಬೇಕು. ಹಗಲಿನ ಬೆಳಕಲ್ಲಿ ಆಹಾರ ಸಂಪಾದಿಸುವ ಗಿಡ-ಮರಗಳು ಇರುಳಾದಾಗ ಬೆಳೆಯುತ್ತವೆ. ಹಗಲಲ್ಲಾದ ಗಾಯಗಳು ಮಾಯಲು ಇರುಳಿನ ಮಡಿಲೇ ಬೇಕು.
******************
ಹಾಗಂತ ಹಗಲು ನಿದ್ರಿಸುವ, ಇರುಳಲ್ಲೇ ತಮ್ಮ ಕೆಲಸ ಕಾರ್ಯಗಳು ಮಾಡುವವರು ಇಲ್ಲವೆಂದಲ್ಲ. ಸಂಜೆ ಮಲ್ಲಿಗೆ ಅರಳಲು ಮುಳುಗುವ ಸೂರ್ಯನ ಬಿಸಿಲೇ ಬೀಳಬೇಕು. ರಾತ್ರಿರಾಣಿ ಅಥವಾ ಬ್ರಹ್ಮಕಮಲ ಅರಳುವುದು ಸಂಪೂರ್ಣ ಕತ್ತಲೆಯಲ್ಲೇ. ಬಾವಲಿಗಳು, ಜಿರಲೆಗಳು, ಸರೀಸೃಪಗಳು ಇರುಳಿಲ್ಲವೆಂದರೆ, ಕತ್ತಲೆಯಿಲ್ಲವೆಂದರೆ ಸ್ವಾಭಾವಿಕವಾಗಿ ಎದ್ದು ಆಚೆಗೆ ಬರಲಾರವು. ರಾತ್ರಿಯ ಬದಲು ಹಗಲು ನಿದ್ರಿಸುವವರಿಗೆ, ಕನಸು ಕಾಣುವವರಿಗೇನೂ ಕಡಿಮೆಯಿಲ್ಲ. ಇವರೆಲ್ಲರಿಗೂ ಪ್ರಕೃತಿಯಲ್ಲಿ ಅವರದೇ ಆದಂತಹ ಸ್ಥಾನವಿದೆ, ಅಲ್ಲಗಳೆಯಲಾಗದಂತಹ ಕೆಲಸಕಾರ್ಯವಿದೆ.
ಹಾಗೇ ಕಳ್ಳಕಾಕರಿಗೂ ಕತ್ತಲೆಯೆಂದರೆ ಪ್ರೀತಿ, ಬೆಳಕಿದ್ದಲ್ಲಿ ಅವರ ಕಾರ್ಯಗಳು ಕೈಗೂಡುವ ಸಾಧ್ಯತೆ ಕಡಿಮೆ. ಈ ಜಗದ ವಿನ್ಯಾಸದಲ್ಲಿ ಕಳ್ಳಕಾಕರಿಗೂ ಬೆಳಕಿನ ಹೆಸರಲ್ಲಿ ಕತ್ತಲೆ ಹಂಚುವವರಿಗೂ ಅವರದೇ ಆದ ಸ್ಥಾನವಿದೆ. ಇವರೆಲ್ಲರೂ ಜಗತ್ತು ಸಂಪೂರ್ಣವೆನಿಸಿಕೊಳ್ಳಲು ಅತ್ಯಗತ್ಯ.
******************
ಬದುಕೊಂದು ಹಾವು-ಏಣಿ ಆಟದ ಹಾಗೆ. ಕತ್ತಲಿನಲ್ಲಿ ಜಾರಿ ಬೆಳಕಿನಲ್ಲೇಳುವುದು, ಕತ್ತಲಿನಲ್ಲಿ ಏರಿ ಬೆಳಕಿನಲ್ಲಿ ಜಾರುವುದು... ಎಲ್ಲಿ ಕತ್ತಲು ಬೇಕೋ ಅಲ್ಲಿ ಬೆಳಕಿದ್ದರೆ, ಬೆಳಕು ಬೇಕಾದಲ್ಲಿ ಕತ್ತಲಿದ್ದರೆ, ಆಟ ಹದತಪ್ಪಿಬಿಡುತ್ತದೆ.
ಬೆಳಕಿನ ಹಬ್ಬವೇನೋ ಈಗ ಕೊನೆಯಾಗುತ್ತಿದೆ, ಆದರೆ ಬದುಕು ನಿರಂತರ. ಬದುಕಿನಲ್ಲಿ ಯಾರಿಗೆಷ್ಟು ಬೆಳಕು ಬೇಕೋ ಅಷ್ಟು ಬೆಳಕು ದಕ್ಕಲಿ... ಯಾರಿಗೆಷ್ಟು ಬೇಕೋ ಅಷ್ಟು ಕತ್ತಲು ದಕ್ಕಲಿ. ಆದರೆ ಕಳ್ಳಕಾಕರ ಬಗ್ಗೆ, ಹುಳಿ ಹಿಂಡುವವರ ಬಗ್ಗೆ, ವಿಷ ಹಂಚುವವರ ಬಗ್ಗೆ ಎಚ್ಚರವಿರಲಿ, ಮಡಿಲಲ್ಲಿ ಸುಡುವ ಬೆಂಕಿಯ ಬೆಳಕನ್ನು, ಬೆಳಕಿನ ವೇಷ ಧರಿಸಿ ಬರುವ ಕತ್ತಲನ್ನು ಹೇಗೆ ನಿಭಾಯಿಸಬೇಕೆಂಬ ವಿವೇಚನೆ ಹುಟ್ಟಿಕೊಳ್ಳುವಷ್ಟು ತಿಳಿವಿನ ಬೆಳಕು ಮನದಲ್ಲಿರಲಿ. ಈ ತಿಳಿವಿನ ನಂದಾದೀಪ ಕಡುಗತ್ತಲೆಯಲ್ಲೂ ಮನದಲ್ಲಿ ಬೆಳಗುತ್ತಿರಲಿ. ಶುಭಾಶಯ...

Monday, August 29, 2016

ಪರಮಪಾಪಿಯ ಹಾಡುಗಳು...

ಹಳೆಯ ಹಾಳೆ ನಡುವೆ ಸಿಕ್ಕ ನವಿಲುಗರಿಯು ನೀನು
ಅದರ ಕಣ್ಣಿನೊಳಗೆ ಸಿಲುಕಿ ಚಿತ್ರವಾದೆ ನಾನು
ನಗುನಗುತಲೆ ಜಗವ ಸೆಳೆವ ಮೋಡಿಗಾರ ನೀನು
ಕಾಣದಿರುವ ಬಲೆಗೆ ಬಿದ್ದ ಮೊದ್ದುಮಿಕವು ನಾನು
ಬೇಕು ಎಂದು ಕೇಳಲಿಲ್ಲ,  ಸಿಕ್ಕ ಪಾಲು ನೀನು
ಬೇಡ ಎಂದು ಹೇಳಲಿಲ್ಲ, ತುಂಬಿಕೊಂಡೆ ನಾನು
ಸಿಕ್ಕೂ ಸಿಗದ, ಬಿಟ್ಟೂ ಬಿಡದ ಆಟಗಾರ ನೀನು
ಯೋಗವೋ ಅನುರಾಗವೋ ಅರಿಯಲಾರೆ ನಾನು
ನನಸಿನಲ್ಲೇ ಕಾಡಿಕೊಲುವ ಸಿಹಿವೇದನೆ ನೀನು
ನೆನಪಿನಲ್ಲೇ ಕಳೆದುಹೋದ ಮೋಹದಾಹಿ ನಾನು
ಬಿಟ್ಟ ಬಂಧ ಮತ್ತೆ ಬಂದು ಕಾಡಿದಾಗ ನೀನು
ಎದೆಹೂಡಿದ ಮುಷ್ಕರಕ್ಕೆ ನಲುಗಿ ಹೋದೆ ನಾನು
ರೆಪ್ಪೆಯಿಂದ ಜಾರಿ ಬಿದ್ದ ನೋವಹನಿಯು ನೀನು
ಎದೆಯ ಕೀಲಿ ಹಾಕಲೊಲ್ಲೆ, ಪರಮಪಾಪಿ ನಾನು...

(ಚೌಚೌಪದಿಗಾಗಿ ಬರೆದಿದ್ದು. ಪದಗುಚ್ಛ: ರೆಪ್ಪೆ- ಅನುರಾಗ-ಮುಷ್ಕರ -ಕೀಲಿ - 28 ಜುಲೈ 2016)
***********************************
ಸಂಜೆಮಲ್ಲಿಗೆಯು ಎದೆಯಲರಳಿಹುದು
ಬಿಡುವ ಚಿಟ್ಟೆ ನೀನಾ?
ಮೌನ, ಬೆಳಕು, ಹಲಬಣ್ಣ ಹರಡಿಹುದು
ನನ್ನ ಹೊಳಹು ನೀನಾ?
ಬೇಕು ಬೇಡಗಳ ಹಾವು ಏಣಿಯಲಿ
ಸೋತೆ, ತಿಳಿಯಿತೇನಾ?
ತಾರೆಗಳೂರಲಿ ಸೂರ್ಯರು ಹಲವರು
ನನ್ನ ರವಿಯು ನೀನಾ...?
ಬೆಳಕು ನೀನು ಬರಿ ಚಂದ್ರ ನಾನು
ನಿನ್ನಿಂದೆ ನಾನು ಕೇಳಾ...
ನಿನ್ನ ವೃತ್ತದಲಿ ನೀನು ಸುತ್ತುತಿರೆ
ಜಗದ ಪರಿಯು ಸರಳ...
ಅಡ್ಡರಸ್ತೆಯಲಿ ಬರಲೇಬಾರದು
ಎದೆಯಹಾದಿ ಜಟಿಲ...
ಜಾರುವ ದಾರಿಯು ನಲ್ಮೆಯ ನಾಳೆಗೆ
ಕತ್ತರಿಯದು, ತಾಳಾ...
ಒಲವ ಕೊಲ್ಲುವವು ಮಾತಿನಾಟಗಳು
ಬಾಯಿ ಬೀಗವಿರಲಿ..
ಬಾನು ನೀರು ಭುವಿಗ್ಯಾವ ಹಂಗಿಹುದು
ಮನಸಿಗ್ಯಾಕೆ ಬೇಲಿ?
ಎಲ್ಲೆ ಮೀರದೆಯೆ ಬೆಳಕು ಹರಿದಿಹುದು
ಗಾಳಿ ಹಗುರ ಹಗುರಾ..
ಇಲ್ಲಿ ನಾನಿರುವೆ ನೀನು ಅಲ್ಲೇ ಇರು
ಕಲ್ಲಾಗುವ ಬಾರಾ..
(ಚೌಚೌಪದಿಗಾಗಿ ಬರೆದಿದ್ದು. ಪದಗುಚ್ಛ: ಬಾಯಿ-ಬೀಗ-ಕತ್ತರಿ-ಅಡ್ಡರಸ್ತೆ-ಬೇಲಿ-ಹೂವು-ಚಿಟ್ಟೆ-ಹಾವು- 29 ಆಗಸ್ಟ್ 2016)

Sunday, February 14, 2010

ವ್ಯಾಲೆಂಟೈನ್ಸ್ ಡೇ ಮತ್ತು ಒಂದಿಷ್ಟು ಸ್ವಗತ

ವ್ಯಾಲೆಂಟೈನ್ಸ್ ಡೇ ಅಂದ್ರೆ ನನ್ನ ಪಾಲಿಗೆ ಮೊದಲೆಲ್ಲ ಎಲ್ಲಾ ದಿನಗಳಂತೆ ಅದೂ ಒಂದು ದಿನವಾಗಿತ್ತು. ಆಮೇಲೆ ಮಾಧ್ಯಮ ಜಗತ್ತಿಗೆ ಎಂಟ್ರಿ ಕೊಟ್ಟ ಮೇಲೆ ಆ ದಿನವನ್ನ ಆಚರಿಸುವವರಿಗೆ Good feeling ತರಲಿಕ್ಕೆ ಸಹಾಯ ಮಾಡುವ ಕೆಲಸ ನಮ್ಮದು ಅಂತ ಅರ್ಥವಾಯ್ತು. ಆದರೆ ಕಳೆದ 2 ವರ್ಷಗಳಿಂದ, ಈ ದಿನ ಬಂತೆಂದರೆ ಸಾಕು, ಎಲ್ಲಿ ಏನು ಗಲಾಟೆಯಾಗುತ್ತದೋ ಅಂತ ಕಾಯಲು ಆರಂಭಿಸಿರುವುದು ವಿಚಿತ್ರವಾದರೂ ಸತ್ಯ. ಈಬಾರಿಯೂ ಅಷ್ಟೆ, ಗಲಾಟೆಯೋ ಗಲಾಟೆ.
-----------------------------------------------------
ಪ್ರೇಮಯುದ್ಧ - ನಮ್ಮ ಚಾನೆಲ್ ಆಯೋಜಿಸಿದ್ದ ಕಾರ್ಯಕ್ರಮ. ಅದರ ಶೂಟಿಂಗ್ ಟೀಮ್ ಕಾರ್ಯಕ್ರಮ ಶೂಟ್ ಮಾಡಿಕೊಂಡು ಬರಲು ಹೋಗಿದ್ದು ಗೊತ್ತಿತ್ತು. ಎಲ್ಲರೂ ಅವರವರ ಕೆಲಸದಲ್ಲಿ ನಿರತರಾಗಿ, ಸುದ್ದಿಯ ಪಾಡಿಗೆ ಸುದ್ದಿ ಶಾಂತವಾಗಿ ಹೋಗುತ್ತಿದ್ದ ಸಮಯ. ಇದ್ದಕ್ಕಿದ್ದಂತೆ ಇನ್ನೊಂದು ಚಾನೆಲ್ಲಿನಲ್ಲಿ ಬ್ರೇಕಿಂಗ್ ನ್ಯೂಸ್ ಬರಲು ಆರಂಭವಾಯ್ತು, ಟೌನ್ ಹಾಲ್ ಬಳಿ ಮುತಾಲಿಕ್ ಮುಖಕ್ಕೆ ಮಸಿ ಬಳಿದಿದ್ದಾರೆ, ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಅಂತ. ನಮಗೂ ಸುದ್ದಿ ಬಂತು, ನಮ್ಮ ಕಾರ್ಯಕ್ರಮದಲ್ಲೇ ನಡೆದಿದ್ದು ಈ ಕೆಲಸ ಅಂತ. ಎಲ್ಲರಿಗೂ ಏನು ನಡೆಯುತ್ತಿದೆ ಅಂತ ಸರಿಯಾಗಿ ಗೊತ್ತಾಗದ ಪರಿಸ್ಥಿತಿ.
ಅಷ್ಟರಲ್ಲಿ ಪಕ್ಕದ ಚಾನೆಲ್ ಮಸಿಬಳಿಯುವ ನೀಟಾದ ದೃಶ್ಯಗಳನ್ನು ಕೊಡಲಾರಂಭಿಸಿತು. ಅಚಾನಕ್ ಆದಂತಹ ಈ ಮಸಿ ಬಳಿವ ಕೆಲಸದ ಬಗ್ಗೆ ಸ್ವಲ್ಪವೂ ಕೂಡ ಐಡಿಯಾ ಇಲ್ಲದ ಕಾರಣ ನಮಗೆ ಆ ದೃಶ್ಯಗಳು ಸಿಕ್ಕಿಲ್ಲವೆಂಬುದು ಕೂಡ ಗೊತ್ತಾಯಿತು. ನಂತರ ಬಂದಂತಹ ದೃಶ್ಯಗಳಲ್ಲಿ ಪೊಲೀಸರು ಕೂಡ ಕಾಣಿಸಿಕೊಂಡರು. ನಂತರ ನಡೆದ ವಾಗ್ವಿವಾದದ ಸಮಯ, ಮುತಾಲಿಕ್ ಬೆಂಬಲಿಗರಲ್ಲಿ ಪ್ರಮುಖನೊಬ್ಬ ವಿಮಲಾ ಮೇಡಂ ಮುಖಕ್ಕೆ ಉಗಿದು ಬಿಟ್ಟ. 4-5 ವರ್ಷಗಳಿಂದ ವಿಮಲಾ ಮೇಡಂ ಪರಿಚಯ ನನಗೆ. ಇವರು ಮುತಾಲಿಕ್ ಅಥವಾ ಬಜರಂಗಿಗಳ ಸಿದ್ಧಾಂತವನ್ನು ವಿವಿಧ ವೇದಿಕೆಗಳಲ್ಲಿ ವಿರೋಧಿಸುತ್ತಲೇ ಬಂದವರು. ಬರಿಯ ವಾಗ್-ವಿರೋಧಕ್ಕಾಗಿಯೇ ಮುತಾಲಿಕ್ ಬೆಂಬಲಿಗರ ವಿರೋಧ ಕಟ್ಟಿಕೊಂಡವರು. ಕಳೆದ ವರ್ಷ ಪತ್ರಿಕೆಯೊಂದು ನಡೆಸಿದ್ದ ಕಾರ್ಯಕ್ರಮದಲ್ಲಿ ಮೊನ್ನೆ ಅವರ ಮುಖಕ್ಕೆ ಉಗಿದಾತ ಬೆದರಿಕೆ ಕೂಡ ಹಾಕಿದ್ದ ಎಂದು ವಿಮಲಾ ಮೇಡಂ ಹೇಳಿದ ನೆನಪು ನನಗೆ.
ಕಳೆದ ವರ್ಷ ಪಬ್ ಅಟಾಕ್ ಸಂಬಂಧ ಚರ್ಚೆಗೆ ಬಂದಿದ್ರು ಮೇಡಂ ಕಸ್ತೂರಿಗೆ, ಅವಾಗ ಮೇಡಂ ಹತ್ರ ಕೇಳಿದ್ದೆ, ಇವರ ಜತೆ ಚರ್ಚೆ ಮಾಡಿದ್ರೆ ಇವ್ರು ಸರಿ ಹೋಗ್ತಾರಾ ಮೇಡಂ, ವೇಸ್ಟ್ ಆಫ್ ಎನರ್ಜಿ ಅಲ್ವಾ ಅಂತ. ಇದು ವಿಚಾರಕ್ಕೆ ಸಂಬಂಧಿಸಿದ್ದಾದ ಕಾರಣ ವೈಚಾರಿಕವಾಗಿಯೇ ಎದುರಿಸಬೇಕು, ಚರ್ಚೆ ಮಾಡಿ ಮಾಡಿಯೇ ಸರಿ ಹೋಗಬಹುದೇ ಹೊರತು ದಂಡ ಮಾರ್ಗದಿಂದಲ್ಲ ಅನ್ನುವುದು ವಿಮಲಾ ಮೇಡಂ ನಿಲುವಾಗಿತ್ತು, ಇಂದು ಕೂಡ ಅದೇ ಮಾತೇ ಅವ್ರು ಹೇಳ್ತಾರೆ.
-----------------------------------------------------
TV9 ನಿಂದ ತೆಗೆದುಕೊಂಡ ಮಸಿ ಬಳಿವ ವಿಶುವಲ್ಸ್ ಹಾಕಿಕೊಂಡ TIMES NOW, SELF-STYLED MORAL POLICEMAN GETS THE TASTE OF HIS OWN MEDICINE ಅಂದಿತು. ನನಗೆ ಪಬ್ ಅಟಾಕ್ ಮತ್ತೊಮ್ಮೆ ನೆನಪಾಯಿತು.
-----------------------------------------------------
ಮಸಿ ಬಳಿದವರನ್ನು ಬಂಧಿಸಲಾಯಿತು, ಕೆಲವು ಕಾಂಗ್ರೆಸ್ಸಿಗರು ನಮ್ಮವರು ಮಾಡಿರುವುದಿಲ್ಲ ಇಂಥಾ ಕೆಲಸ ಅಂದ್ರು. ಇನ್ನು ಕೆಲವರು ಟೈಮ್ಸ್ ನವ್ ಧಾಟಿಯಲ್ಲೇ ಮಾತಾಡಿದ್ರು. ಮತ್ತೆ ಕೆಲವ್ರು ಅವರವರ ಸ್ವಂತ ಇಚ್ಛೆಯಿಂದ ಮಾಡಿದ ಕೆಲಸ, ಪಕ್ಷಕ್ಕೆ ಸಂಬಂಧಿಸಿದ್ದಲ್ಲ ಇದು ಅಂದ್ರು. ಮತ್ತೆ ಕೆಲವ್ರು ಅವ್ರನ್ನ ಬಂಧಿಸಿಟ್ಟಿದ್ದ ಪೊಲೀಸ್ ಠಾಣೆಗೇ ಭೇಟಿ ಕೊಟ್ಟು ನಮ್ಮ ಕ್ಯಾಮರಾಕ್ಕೆ ಸಿಗಾಕ್ಕೊಂಡ್ರು. ಮುಖಕ್ಕೆ ಮಸಿ ಬಳಿದೋರ್ನ ಬಿಡೋದಿಲ್ಲ ಅಂತ ಮುತಾಲಿಕ್ ಹೇಳಿಕೆ, ಅಂದ್ರೆ ಕಥೆ ಇಲ್ಲಿಗೇ ನಿಲ್ಲೂದಿಲ್ಲ ಅಂತ ಅರ್ಥ... There is more to come.
-----------------------------------------------------
ವಿಮಲಾ ಮೇಡಂ ಮುಖಕ್ಕೆ ಉಗಿದವ ಬಿಂದಾಸ್ ಆಗಿ ತಿರುಗಾಡ್ತಿದ್ದ. ಸಂಜೆ ನಮ್ಮ ಆಫೀಸಲ್ಲಿ ಡಿಸ್ಕಶನ್ ಇತ್ತಲ್ಲ, ಅಲ್ಲಿಗೂ ಬಂದಿತ್ತು ಕೋತಿ ಸೇನೆ, ಅವನೂ ಬಂದಿದ್ದ. ಬಾಯಲ್ಲಿ ಹೆಂಗಸರು ಅಂದ್ರೆ ದೇವ್ರು ಅದೂ ಇದೂ ಅಂತ ಬಾಯಲ್ಲಿ ಹೊಗೆ ಬಿಡುವ ಪಾರ್ಟಿಗಳು, ಮಹಿಳೆಯರು ಪಬ್-ನಲ್ಲಿ ಕೂರಬಾರದು ಅಂತ ಹೆಂಗಸರಿಗೆ ಹೊಡೆದು ಹೋರಾಡಿದ(!) ಪಾರ್ಟಿಗಳು, ಅದ್ಯಾಕೆ ನೀಟಾಗಿ ಸೀರೆಯುಟ್ಟಿದ್ದ ಅಪ್ಪಟ ಭಾರತೀಯ ನಾರಿಯಾಗಿಯೇ ಕಾಣುವ ಗೌರವಾನ್ವಿತ ಮಹಿಳೆಯೋರ್ವಳ ಮುಖದ ಮೇಲೆ ಉಗಿಯುವ ಸಂಸ್ಕೃತಿ ಬೆಳೆಸಿಕೊಂಡರೋ ಗೊತ್ತಾಗಲಿಲ್ಲ.
-----------------------------------------------------
ಲವ್ ಜೆಹಾದ್ ಆರೋಪಕ್ಕೆ ಒಳಗಾಗಿದ್ದ ಇರ್ಫಾನ್-ಅಶ್ವಿನಿ ಮತ್ತು ತೌಫೀಕ್-ಸಹನಾ ಜೋಡಿ, ರವಿ ಬೆಳಗೆರೆ ಜತೆಗೆ ಭಾಗವಹಿಸಿದ್ದ ಕಾರ್ಯಕ್ರಮ, 'ಅಹಂ ಪ್ರೇಮಾಸ್ಮಿ' . ಇದು ನೋಡಿದ ಮೇಲೆ ಅನಿಸಿದ್ದು, ಇಸ್ಲಾಂ ಧರ್ಮ ಸ್ವಲ್ಪ ಲಿಬರಲ್ ಆಗಿ ಬದಲಾಗಿದ್ರೆ ಬಹುಶ: ಈ ಲವ್-ಜೆಹಾದ್ ಅನ್ನುವ ಐಡಿಯಾವೇ ಯಾರ ತಲೆಗೂ ಬರ್ತಿರಲಿಲ್ಲ.
ಹಿಂದೂ ಧರ್ಮದಲ್ಲಿಯೂ ಬೇಕಾದಷ್ಟು ಅರೆಕೊರೆಗಳಿರಲಿಲ್ವಾ, ಈಗ ಎಲ್ಲಾ ಕಾಲಕ್ಕೆ ತಕ್ಕ ಹಾಗೆ ತಿದ್ದಿಕೊಂಡು ಮುಂದೆ ಹೋಗ್ತಾ ಇಲ್ವಾ? ಸತೀ ಪದ್ಧತಿ, ಬಾಲ್ಯವಿವಾಹ ಇತ್ಯಾದಿಗಳ ತಡೆಗೆ ಕಾಯಿದೆ-ಕಾನೂನುಗಳ ಸಹಕಾರವಿದೆ. ಆದರೆ ಮುಸ್ಲಿಂ ಮದುವೆಗಳ ರೀತಿ ಬೇರೆ. ಇವು ಪ್ರೇಮವಿವಾಹ ಅಥವಾ ಅಂತರ್ಜಾತೀಯ ವಿವಾಹವೇ ಆದರೂ, ಶೆರಿಯತ್-ನ ನಿಯಮಗಳಿಗನುಸಾರವಾಗಿ ಮುಸ್ಲಿಂ ಧರ್ಮಗುರುಗಳ ಸಮಕ್ಷಮದಲ್ಲಿ ವಿವಾಹವಾದರೆ ಮಾತ್ರ ಮಾನ್ಯವಾಗುತ್ತವೆ. ಅಂತರ್ಜಾತೀಯ ವಿವಾಹಗಳಿಗೆ ಒಪ್ಪಿಗೆ ನೀಡಿರುವ ಇಸ್ಲಾಂ, ಅನ್ಯಧರ್ಮೀಯರು ಮುಸ್ಲಿಂ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕಾದರೆ, ತಮ್ಮ ಧರ್ಮವನ್ನು ಮುಸ್ಲಿಂ ಧರ್ಮಕ್ಕೆ ಬದಲಾಯಿಸಿಕೊಳ್ಳಬೇಕಾದುದು ಕಡ್ಡಾಯವೆಂಬ ನಿಯಮ ರೂಢಿಯಲ್ಲಿಟ್ಟಿದೆ. ಇದೇ ಎಲ್ಲಾ ಗೊಂದಲಕ್ಕೂ ಮೂಲ. ಪ್ರೇಮಕ್ಕೂ ಭಯೋತ್ಪಾದನೆಯ ಬಣ್ಣ ಬರಲು ಕಾರಣ. ಬಹುಶ: ಹಿಂದೂ ಧರ್ಮದ ಹಾಗೇ ಇಸ್ಲಾಂ ಕೂಡ ಕೆಟ್ಟದನ್ನು, ಕಾಲಕ್ಕೆ ಸಲ್ಲದ್ದನ್ನು ಕಳಚಿಕೊಳ್ಳುವ ಹಾಗಿದ್ರೆ ಚೆನ್ನಾಗಿತ್ತು, ಜಗತ್ತಲ್ಲಿ ಶಾಂತಿಗೆ ಸ್ವಲ್ಪ ಹೆಚ್ಚು ಜಾಗ ಇರ್ತಿತ್ತು...
ಇದು ಧರ್ಮದ ಮಾತಾಯ್ತು. ಆದರೆ ಇಂದಿನ ದಿನದಲ್ಲಿ ಧರ್ಮಕ್ಕಿಂತ INDIVIDUAL DECISIONS ಹೆಚ್ಚು ತೂಕದ್ದು ಅಂತ ನನ್ನ ಭಾವನೆ. ಮುಸ್ಲಿಂ ಹುಡುಗನ ಜತೆಗೆ ಬದುಕು ಕಟ್ಟಿಕೊಂಡಿರುವ ನನ್ನ ಗೆಳತಿ ಹೆಸರು ಬದಲಾಯಿಸಿಕೊಂಡಿಲ್ಲ, ದೇವರನ್ನು ನಂಬದ ಆಕೆ ನಮಾಜು ಮಾಡುವುದಿಲ್ಲ. ಆಕೆಯ ಸಂಗಾತಿಯೂ ಒತ್ತಾಯಿಸಿಲ್ಲ. ಆದರೆ ಅವರ ಪಾಲಿಗೆ ಬದುಕೇನೂ ನಿಂತಿಲ್ಲ, ನಡೆಯುತ್ತಲೇ ಇದೆ.
ಆ ಇಬ್ರೂ ಹುಡುಗಿಯರು ಹೆಸರು ಬದಲಾಯಿಸಿಕೊಂಡಿದ್ದಾರೆ, ಬುರ್ಖಾ ಹಾಕ್ತಾರೆ. ಅವರಲ್ಲಿ ಒಬ್ಳು ಹೇಳಿದ್ಲು, ಮೊದ್ಲು ಇಸ್ಲಾಂನ ಇಷ್ಟ ಪಟ್ಟೆ, ಹಾಗೇ ಇಸ್ಲಾಂ ಇಷ್ಟಪಡೋ ಹುಡುಗನ್ನೂ ಇಷ್ಟ ಪಟ್ಟೆ ಅಂತ. ನಿಜವಾಗಿ ಅವರ ಕೇಸಲ್ಲಿ ಪ್ರೀತಿ ಮೊದಲು ಹುಟ್ಟಿತ್ತು, ನಂತರ ಬಂದಿದ್ದು ಜಾತಿ. ಇದೇ ಪಾಯಿಂಟ್ ಮುಂದಿಟ್ಟು ಅವ್ರು ಕೋರ್ಟಲ್ಲೂ ಗೆದ್ದಿದ್ದು. ಹೀಗಾಗಿ ಈ ಡೈಲಾಗು ನಂಗ್ಯಾಕೋ ಸ್ವಲ್ಪ ಓವರ್ ಆಯ್ತು ಅನಿಸಿತು... ಈಗ ಇಸ್ಲಾಂ ಧರ್ಮ ಫಾಲೋ ಮಾಡ್ತಿರೋದಕ್ಕೆ ಅನಗತ್ಯವಾಗಿ ಬೇಕಾದ್ದಕ್ಕಿಂತ ಹೆಚ್ಚು ಸಮರ್ಥನೆ ಕೊಡ್ತಿದಾಳೆ ಅನಿಸ್ತು. ಸೋ ಕಾಲ್ಡ್ ಲವ್ ಜೆಹಾದ್ ಬಗ್ಗೆ ಇಷ್ಟೆಲ್ಲಾ ಬರೀಬೇಕು ಅನಿಸಿತು.
-----------------------------------------------------
ನನ್ನ ಎಲ್ಲಾ ತಾಕಲಾಟಗಳ ನಡುವೆ ಲೈಫ್ ಕೊಟ್ಟಿರೋ ಗಿಫ್ಟ್ ನನ್ನವ... he makes life easier to live. ವ್ಯಾಲೆಂಟೈನ್ಸ್ ಡೇ ದಿನ ಬೇರೆಲ್ಲಾ ಬರೆದು, ಇವನ ಬಗ್ಗೆ ಮಾತ್ರ ಬರೀದಿದ್ರೆ ಹ್ಯಾಗೆ? ನಿನ್ನೆ ಪೂನಾದಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ತಿಂಗಳಿಗೆ ಎರಡು ಸರ್ತಿ ಪೂನಾಕ್ಕೆ ಭೇಟಿ ನೀಡುವ ನನ್ನವ, ನಾಡಿದು ಮತ್ತೆ ಪೂನಾಕ್ಕೆ ಹೋಗ್ತಾನೆ. 'ಪೂನಾಕ್ಕಾ...' ಅಂತ ಗಾಬರಿ ಕಣ್ಣು ತೋರಿಸಿದ್ದಕ್ಕೆ, ಈಗಷ್ಟೇ ಬಾಂಬ್ ಬ್ಲಾಸ್ಟ್ ಆಯ್ತಲ್ಲ, ಇನ್ನು 15 ದಿನ ಸೆಕ್ಯೂರಿಟಿ ಹೆಚ್ಚಾಗಿರುತ್ತೆ, ನಥಿಂಗ್ ಟು ವರಿ ಅಂತ ನಕ್ಕುಬಿಟ್ಟ. ಕಳ್ಳ.

Tuesday, July 14, 2009

ಕಳೆದುಕೊಳ್ಳುವ ಬಗೆಗೊಂದು ಸ್ವಗತ...

ಎರಡು ವರ್ಷದ ಹಿಂದಿನ ಕಥೆ. ಅವತ್ತೊಂದು ದಿನ ಬನ್ನೇರುಘಟ್ಟದಲ್ಲಿರುವ ಅತ್ತಿಗೆಯ ಮನೆಯಿಂದ ವಾಪಸ್ ಹೊರಟವಳು ಗೆಳತಿಯ ಮನೆಗೆ ಹೋಗುವ ಬಸ್ಸಿನಲ್ಲಿ ಕೂತಿದ್ದೆ. ಅರ್ಧ ದಾರಿಯಲ್ಲಿ ನನ್ನ ಪಕ್ಕದಲ್ಲಿ ನಿಂತಿದ್ದ ಹೆಂಗಳೆಯೊಬ್ಬಳು ತನ್ನ ಮಗುವನ್ನು ನನ್ನ ಮಡಿಲಲ್ಲೇರಿಸಿದಳು. ಮಗುವನ್ನು ನೀಟಾಗಿ ನನ್ನ ಮಡಿಲಲ್ಲಿ ಅವಳು ಕೂರಿಸುವಾಗ ನಾನು ಪಿಳಿಪಿಳಿ ಕಣ್ಣುಬಿಡುತ್ತಿದ್ದ ಮಗುವಿನ ಮುಖ ನೋಡ್ತಾ ಇದ್ದೆ. ಅವಳು ಕೂರಿಸಿಯಾದ ಮೇಲೆ ಮಗುವನ್ನು ನಾನು ಹಿಡಿದುಕೊಂಡು ಕೂತೆ.

ಸ್ವಲ್ಪ ದೂರ ಹೋದನಂತರ ಆಕೆ ಮಗುವನ್ನು ನನ್ನ ಮಡಿಲಿನಿಂದ ತೆಗೆದುಕೊಂಡು ಬಸ್ ಇಳಿದಳು. ಅದ್ಯಾಕೋ ಅವಳು ಸ್ವಲ್ಪ ಜಾಸ್ತಿಯೇ ನನ್ನ ಮಡಿಲು ತಡಕಿದಳೇನೋ ಅಂತನಿಸಿದರೂ ಅದೇಕೋ ಆಕಡೆ ಗಮನ ಕೊಡಲಿಲ್ಲ.

ನಂತರ ಜಯನಗರದಲ್ಲಿ ಬಸ್ಸಿಂದ ಇಳಿಯುವಾಗ ಪರ್ಸ್ ಝಿಪ್ ತೆರೆದಿದ್ದು ಗಮನಕ್ಕೆ ಬಂತು. ಆಗಲೂ ನನಗೇನೂ ಅನಿಸಲಿಲ್ಲ. ಝಿಪ್ ಹಾಕಿಕೊಂಡು ಆಟೋ ಹಿಡಿದು, ವಿದ್ಯಾಪೀಠ ಸರ್ಕಲ್ಲಿಗೆ ಹೋದೆ. ಅಲ್ಲಿ ಫ್ರೆಂಡ್ ಮನೆಯ ಹತ್ತಿರ ಇಳಿದು ದುಡ್ಡಿಗೆಂದು ಪರ್ಸ್ ತಡಕಾಡಿದರೆ- ಬ್ಯಾಂಕಿಗೆ ಹಾಕಬೇಕೆಂದು ಬ್ಯಾಗಲ್ಲಿಟ್ಟುಕೊಂಡಿದ್ದ ಉಳಿತಾಯದ 9,500 ರೂಪಾಯಿ ಇದ್ದ ಕಟ್ಟು ಕಾಣೆ... ಕಳ್ಳಿ ಮೊಬೈಲ್ ಉಳಿಸಿಹೋಗಿದ್ದಳು. ಗೆಳತಿಯ ಮನೆ ಅಲ್ಲೇ ಇದ್ದ ಕಾರಣ ಆಟೋ ಚಾರ್ಜ್ ಕೊಟ್ಟು ಬಚಾವಾದೆ. (ಪೊಲೀಸ್ ಹತ್ತಿರ ದೂರು ಕೊಡಲಿಕ್ಕೆ ಹೋಗಿದ್ದೆ, ಆಕಥೆ ಇನ್ನೊಮ್ಮೆ ಹೇಳ್ತೀನಿ)

--------------------------------

ವರ್ಷದ ಹಿಂದಿನ ಕಥೆ. ಒಂದು ಮಧ್ಯಾಹ್ನ. ಐಸಿಐಸಿಐ ಕ್ರೆಡಿಟ್ ಕಾರ್ಡ್ ವಿಭಾಗದಿಂದ ಕರೆ ಬಂತು. ಏನೆಂದು ಕೇಳಿದರೆ, "ನೀವು ನಿನ್ನೆ ಮಾಡಿದ ಖರೀದಿಯನ್ನು ಇಎಂಐ ಮೂಲಕ ಕಟ್ಟಬಹುದು, ತಿಳಿಸಲಿಕ್ಕೆ ಕರೆ ಮಾಡಿರುವೆವು" ಎಂದರು. ಆ 'ನಿನ್ನೆ' ನಾನೆಲ್ಲೂ ಕ್ರೆಡಿಟ್ ಕಾರ್ಡ್ ಉಜ್ಜಿರಲಿಲ್ಲವಾದ್ದರಿಂದ ಇವರು ಯಾವುದರ ಬಗ್ಗೆ ಹೇಳುತ್ತಿದ್ದಾರೆಂದು ತಿಳಿಯಲಿಲ್ಲ. ಕೇಳಿದರೆ ಹೇಳಿದರು, ನಾನು 37,000+ ಮೌಲ್ಯದ ವಿಮಾನದ ಟಿಕೆಟ್-ಗಳು ಕ್ರೆಡಿಟ್ ಕಾರ್ಡ್ ಮೂಲಕ ಹಿಂದಿನ ದಿನ ಖರೀದಿಸಿದ್ದೆನಂತೆ.

ಕೂಡಲೇ ಎಚ್ಚತ್ತ ನಾನು, ನಾನು ಖರೀದಿಸಿಯೇ ಇಲ್ಲವೆಂದು ಹೇಳಿದೆ. ಸ್ವಲ್ಪ ವಿಚಾರಣೆ ನಡೆಸಿ ನಾನು ಆಸಮಯದಲ್ಲಿ ಬೇರೇನೋ ಮಾಡುತ್ತಿದ್ದೆ, ಮತ್ತು ಕ್ರೆಡಿಟ್ ಕಾರ್ಡ್ ನನ್ನ ಹತ್ತಿರವೇ ಇತ್ತು, ಬೇರೆಲ್ಲೂ ಹೋಗಿರಲಿಲ್ಲ ಎಂಬ ಉತ್ತರ ಪಡೆದ ನಂತರ, ಆಕೆ ನನಗೆ ಕೂಡಲೇ ಐಸಿಐಸಿಐ ಕ್ರೆಡಿಟ್ ಕಾರ್ಡ್ ಡಿವಿಜನ್ನಿಗೆ ಟ್ರಾನ್ಸಾಕ್ಷನ್ ಡಿಸ್ಪ್ಯೂಟ್ ಹಾಕಲು ಹೇಳಿದಳು. ಕೊನೆಗೆ ಅದೇನೇನು ಮಾಡಬೇಕೋ ಎಲ್ಲಾ ಮಾಡಿ, ಬ್ಯಾಂಕಿಗೆ ನಾನು ಮಾಡಿದ ಖರೀದಿಯಲ್ಲವೆಂಬುದನ್ನು ತಿಳಿಯಪಡಿಸಿದೆ. ಅವರು ಒಪ್ಪಿಕೊಂಡು ನನ್ನ ಬಿಲ್-ನಿಂದ ತಾತ್ಕಾಲಿಕವಾಗಿ ಅದನ್ನು ತೆಗೆಯುತ್ತೇವೆಂದರು. ಒಂದು ವೇಳೆ ತಮ್ಮ ತನಿಖೆಯಲ್ಲಿ ನಾನೇ ಖರೀದಿಸಿದ್ದೆಂದು ಪ್ರೂವ್ ಆದರೆ ಮಾತ್ರ ಅದನ್ನು ನಾನೇ ಕಟ್ಟಬೇಕಾಗುತ್ತದೆಂದು ಎಚ್ಚರಿಸಿದರು. ನಾನು ಖರೀದಿಯೇ ಮಾಡಿಲ್ಲವಾದ ಕಾರಣ ಅವರು ಸಾಧಿಸುವ ಪ್ರಶ್ನೆಯೇ ಬರುವುದಿಲ್ಲವೆಂದು ನಾನು ಭರವಸೆ ನೀಡಿದೆ.

ಕೆಲ ದಿನ ಬಿಟ್ಟು ಕ್ರೆಡಿಟ್ ಕಾರ್ಡ್ ಬಿಲ್ ಬಂತು. ಅದರಲ್ಲಿ ನಾನು ಕಟ್ಟಬೇಕಿರುವ ದುಡ್ಡು ಸೊನ್ನೆ ರೂಪಾಯಿಯಿತ್ತು, ನನಗೆ ದುಡ್ಡು ಬರಬೇಕಿತ್ತು. ಏನೆಂದು ಚೆಕ್ ಮಾಡಿದರೆ, ವಿಮಾನ ಟಿಕೆಟ್ ಖರೀದಿಸಿದಾಗ ಅದರಲ್ಲಿ 5% cash-back offer ಇದ್ದುದರಿಂದ 1800 ರೂಪಾಯಿಯಷ್ಟು ನನ್ನ ಅಕೌಂಟಿಗೆ ವಾಪಸ್ ಬಂದು, ನಾ ಕಟ್ಟಬೇಕಿರುವ 1700+ರಷ್ಟು ದುಡ್ಡು ಮಾಫಿಯಾಗಿತ್ತು..!

--------------------------------

ಇವತ್ತು ಶಿವಾಜಿನಗರದಲ್ಲಿ ಬಸ್ಸಿಗೆ ಕಾದುನಿಂತಿದ್ದೆ. ಬಸ್ ಬಂತು, ಸಹಜವಾಗಿಯೇ ರಶ್ ಇತ್ತು. ನೂಕುನುಗ್ಗಲಿನಲ್ಲಿ ಬಸ್ಸಿಗೆ ಹತ್ತುವಾಗ ನನ್ನ ಹಿಂದಿದ್ದವಳ ಕೈ ನನ್ನ ಹ್ಯಾಂಡ್ ಬ್ಯಾಗಿನ ಬದಿಯಲ್ಲಿ ಝಿಪ್ ತೆರೆಯಲು ಯತ್ನಿಸುತ್ತಿದ್ದುದು ಅನುಭವಕ್ಕೆ ಬಂತು. ಮೆಲ್ಲಗೆ ನೋಡಿ ವಿಷಯ ಹೌದೆಂದು ಕನ್-ಫರ್ಮ್ ಮಾಡಿಕೊಂಡೆ. ಬ್ಯಾಗ್ ಹಾಕಿಕೊಂಡಿದ್ದ ಕೈಯಿಂದ ಆಕೆಯ ಕೈಹಿಡಿದೆ. ಬಿಡಿಸಿಕೊಳ್ಳಲು ಯತ್ನಿಸಿದಳು. ನಾ ಬಿಡಲಿಲ್ಲ. ಹಾಗೇ ಹಿಂತಿರುಗಿ ನೋಡಿ "ಏನ್ರೀ ಮಾಡ್ತಿದೀರಾ, ಮರ್ಯಾದಸ್ತರ ಥರ ಕಾಣ್ತೀರಾ, ಮಾಡೋದು ಇಂಥಾ ಕಚಡಾ ಕೆಲಸಾನಾ" ಅಂತ ರೋಪ್ ಹಾಕಿದೆ.

ಆಕೆ ತಕ್ಷಣ ಕೈಬಿಡಿಸಿಕೊಂಡಳು, "ನಾನೇನು ಮಾಡಿದೀನಿ, ನನ್ನ ಪಾಡಿಗೆ ಬಸ್ಸಿಗೆ ಹತ್ತುತಾ ಇದ್ದೀನಿ" ಅಂದಳು. ಬಸ್ಸಿಗೆ ಹತ್ತೋರು ನನ್ "ಬ್ಯಾಗಿಗೆ ಯಾಕ್ ಕೈಹಾಕ್ತಿದೀರಾ" ಅಂದೆ. "ಹಿಡ್ಕೊಳ್ಳೋಕೆ ಏನೂ ಸಿಕ್ಕಿಲ್ಲ, ಹಾಗಾಗಿ ಬ್ಯಾಗ್ ಹಿಡಿದೆ" ಎಂದಳು. ಉಳಿದವರು ನಮ್ಮ ಜಗಳ ನೋಡುತ್ತಿದ್ದರು. ಆದರೆ ಆಕೆ ಕದಿಯಲು ಹೊರಟವಳೆಂದು ಸಾಧಿಸಲು ನನ್ನಲ್ಲೇನೂ ಇರಲಿಲ್ಲವಾದ ಕಾರಣ ಕೊನೆಗೆ ನಾನೇ ಸುಮ್ಮನಾದೆ. ಆಕೆ ತನ್ನನ್ನು ಕಳ್ಳಿಯೆಂದ ನನಗೆ ಹಿಡಿಶಾಪ ಹಾಕುತ್ತಿದ್ದಳು.

---------------------------------

ಕಳ್ಳರು ಬೇರೆ ಬೇರೆ ರೀತಿಯಲ್ಲಿರುತ್ತಾರೆ. ಕೆಲವರಿಗೆ ದೋಚುವುದು ಬದುಕಲಿಕ್ಕಿರುವ ಅನಿವಾರ್ಯತೆ. ಇನ್ನು ಕೆಲವರಿಗೆ ಕದಿಯುವುದು ಚಟ. ಕೆಲವರು ದೋಚಿದ್ದು ಗೊತ್ತೇ ಆಗುವುದಿಲ್ಲ - ತುಂಬಾ ಸೊಫಿಸ್ಟಿಕೇಟೆಡ್ ಆಗಿ ಕೃತ್ಯವನ್ನು ಗೈದಿರುತ್ತಾರೆ, ಮತ್ತು ಅದಕ್ಕೇನಾದರೂ ಹೆಸರು ಕೂಡ ಇಟ್ಟಿರುತ್ತಾರೆ. ಕದ್ದಿದ್ದನ್ನು ಅಥವಾ ದೋಚಿದ್ದನ್ನು ಒಪ್ಪಿಕೊಳ್ಳುವ ಕಳ್ಳರು ತುಂಬಾ ಕಡಿಮೆ. ಕದಿಸಿಕೊಳ್ಳುವುದು, ಕಳೆದುಕೊಳ್ಳುವುದು ನನಗೆ ಅಭ್ಯಾಸವಾಗಿಹೋಗಿದೆ.

ಹಾಗೆಂದು ಬದುಕಲ್ಲಿ ಕಳೆದುಕೊಳ್ಳಲು ಬೇಜಾರಿರಲಿಲ್ಲ ನನಗೆ... ಬದುಕೆಂದರೆ ಕಳೆಯುವ-ಕೂಡುವ ಲೆಕ್ಕಾಚಾರ ಎಂಬ ಮಾತು ಒಪ್ಪಿಕೊಳ್ಳಲು ಹಿಂದೆ-ಮುಂದೆ ನೋಡಿದವಳು ನಾನು.

ಆದರೆ, ಇತ್ತೀಚೆಗೆ ಮಾತ್ರ, ನಿಜ, ಬದುಕೆಂದರೆ ಕೂಡುವುದು - ಕಳೆಯುವುದು ಬಿಟ್ರೆ ಇನ್ನೇನೂ ಇಲ್ಲ ಅಂತ ಅನಿಸ್ತಿದೆ. ಬರೀ ಕಳೆದುಕೊಳ್ಳುವುದರಿಂದ ಏನು ಸಾಧಿಸ್ತೀನಿ, ಬದುಕಿಡೀ ಇದೇ ಆದರೆ, ಪಡೆದುಕೊಳ್ಳುವುದು ಯಾವಾಗ ಅಂತ ಅನಿಸ್ತಿದೆ. ಏನು ಪಡೆದೆವೋ ಅದು ಮಾತ್ರ ಕೊನೆಗೆ ಬದುಕ ಬುತ್ತಿಯಲ್ಲುಳಿಯುತ್ತದೆ, ನಮ್ಮನ್ನು ಅಳೆಯುವವರೂ ಅದರ ಮೂಲಕವೇ ಅಳೆಯುತ್ತಾರೆ... ಕಳೆದುಕೊಂಡಿದ್ದಕ್ಕೆ ಕಣ್ಣೀರಿಡುವುದು ಉಪಯೋಗವಿಲ್ಲ, ಪಡೆಯಲಿಕ್ಕೆ ಪ್ಲಾನ್ ಮಾಡಬೇಕು ಅಂತನಿಸುತ್ತಿದೆ.

ಇದೆಲ್ಲದಕ್ಕಿಂತ ಹೆಚ್ಚಾಗಿ, ಮನುಷ್ಯ ಮೂಲತಹ ತುಂಬಾ ಸ್ವಾರ್ಥಿ, ಸ್ವಾರ್ಥ ಬಿಟ್ಟು ಬದುಕುವುದು ಅಪರೂಪದ ಕೆಲಸ, ಅದು ಮಾಡಿ ನಾನ್ಯಾಕೆ ಬುದ್ಧನ ಶ್ರೇಣಿಗೇರಬೇಕು, ಅದರಿಂದೇನಾಗುತ್ತದೆ - ಅಂತಲೂ ಅನಿಸ್ತಿದೆ. ನಮ್ಮ ಆತ್ಮದ ಒಳಗಿರುವ ಅಹಂ ಯಾವಾಗಲೂ ಲೆಕ್ಕಾಚಾರ ಹಾಕುತ್ತಿರುತ್ತದೆ - ಅದಕ್ಕೆ ಸ್ವಾರ್ಥದಿಂದಲೇ ತೃಪ್ತಿ - ಅಲ್ವಾ...?